ಮುಂಬೈ: ಮಹಾರಾಷ್ಟ್ರದ 16 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ತಾವು ಸೂಕ್ತ ವಿಧಿವಿಧಾನಗಳನ್ನು ಅನುಸರಿಸಲಿದ್ದು, ಸುಪ್ರೀಂ ಕೋರ್ಟ್ ನೀಡಿದ ಸೂಚನೆಯಂತೆ ಸೂಕ್ತ ಸಮಯದೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ವಿಧಾನಸಭೆಯ ಸ್ಪೀಕರ್ ರಾಹುಲ್ ನರ್ವೇಕರ್ ಸೋಮವಾರ ಹೇಳಿದ್ದಾರೆ.
ಲಂಡನ್ ಪ್ರವಾಸದಿಂದ ಮರಳಿದ ಅವರು ಸುದ್ದಿಗಾರರ ಜೊತೆಗೆ ಮಾತನಾಡಿ, ‘ಅವಸರದ ನ್ಯಾಯ ಎಂದರೆ ನ್ಯಾಯವನ್ನು ಸಮಾಧಿ ಮಾಡಿದಂತೆ, ನ್ಯಾಯ ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆ ಎಂಬ ಮಾತು ಇದೆ. ಆದರೆ, ನಾನು ಸುಪ್ರೀಂ ಕೋರ್ಟ್ ಸೂಚನೆಯಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ ಕ್ರಮ ಕೈಗೊಳ್ಳಲಿದ್ದೇನೆ’ ಎಂದರು.
‘ನಾನು ಯಾವುದೇ ಒತ್ತಡದಲ್ಲಿ ಕೆಲಸ ಮಾಡುವುದಿಲ್ಲ. ಹೊರಗಿನ ಹೇಳಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.
ಮುಖ್ಯಮಂತ್ರಿ ಏಕನಾಥ ಶಿಂದೆ ಸೇರಿದಂತೆ 16 ಮಂದಿ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ಆರಂಭಿಸುವಂತೆ ಆಗ್ರಹಿಸಿ ಶಿವಸೇನಾ ಉದ್ಧವ್ ಠಾಕ್ರೆ ಬಣದ ಶಾಸಕರು ಮತ್ತು ಸಂಸದರಿದ್ದ ನಿಯೋಗವು ವಿಧಾನಸಭೆಗೆ ತೆರಳಿ ಸ್ಪೀಕರ್ ಅನುಪಸ್ಥಿತಿಯಲ್ಲಿ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಮನವಿ ಸಲ್ಲಿಸಿದೆ.
‘ಸ್ಪೀಕರ್ ಅನುಪಸ್ಥಿತಿಯಲ್ಲಿ ಉಪಸ್ಪೀಕರ್ಗೆ ಮನವಿ ಸಲ್ಲಿಸಿದ್ದೇವೆ’ ಎಂದು ಶಿವಸೇನಾ ಮುಖ್ಯ ಸಚೇತಕ ಸುನಿಲ್ ಪ್ರಭು ತಿಳಿಸಿದ್ದಾರೆ.
‘ಶಾಸಕರ ಅನರ್ಹತೆ ವಿಚಾರವಾಗಿ ಸ್ಪೀಕರ್ಗೆ ನಿರ್ಧಾರ ಕೈಗೊಳ್ಳಲು ಬಿಡಿ, ಅವರ ಮೇಲೆ ಒತ್ತಡ ಹಾಕಬೇಡಿ’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.