ನವದೆಹಲಿ: ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಬಳಿಕ ಇ.ಡಿ ನೀಡಿದ ದೂರಿನ ಮೇರೆಗೆ ಕೇಜ್ರಿವಾಲ್, ಫೆಬ್ರುವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಯೂರ್ ವಿಹಾರ 3ನೇ ಹಂತದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಶಂಕುಸ್ಥಾಪನೆಯ ಬಳಿಕ ಮಾತನಾಡಿದ ಕೇಜ್ರಿವಾಲ್, 'ದೇಶದ ಅತಿ ದೊಡ್ಡ ಭಯೋತ್ಪಾದಕ'ನಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ಎಲ್ಲ ತನಿಖಾ ಸಂಸ್ಥೆಗಳನ್ನು ತನ್ನ ವಿರುದ್ಧ ಛೂ ಬಿಟ್ಟಿದೆ ಎಂದು ಆರೋಪಿಸಿದರು.