ನವದೆಹಲಿ (ಪಿಟಿಐ): ಜಾಟ್ ಸಮುದಾಯವನ್ನು ಇತರೆ ಹಿಂದುಳಿದ ಜಾತಿಯ (ಒಬಿಸಿ) ಮೀಸಲಾತಿ ಸೌಲಭ್ಯದ ವ್ಯಾಪ್ತಿಗೆ ಒಳಪಡಿಸಿ ಹೊರಡಿಸಿದ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಕೇಂದ್ರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವಂತಹ ಯಾವುದೇ ಅಂಶಗಳೂ ಕಂಡುಬರುತ್ತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಪಿ. ಸದಾಶಿವಂ, ನ್ಯಾಯಮೂರ್ತಿಗಳಾದ ರಂಜನ್ ಗಗೋಯಿ ಮತ್ತು ಎನ್. ವಿ. ರಮಣಾ ಅವರನ್ನು ಒಳಗೊಂಡ ನ್ಯಾಯಪೀಠವು ತಿಳಿಸಿದೆ.
ನಿರ್ದಿಷ್ಟ ಸಮುದಾಯದ ಮತದಾರರನ್ನು ಓಲೈಸುವ ಉದ್ದೇಶದಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು ಅಂದರೆ ಮಾರ್ಚ್ 4ರಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಒಬಿಸಿ ಮೀಸಲಾತಿ ರಕ್ಷಾ ಸಮಿತಿಯ ಪರ ವಕೀಲ ಕೆ. ಕೆ. ವೇಣುಗೋಪಾಲ್ ವಾದಿಸಿದರು.
ಮಾದರಿ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಿರ್ಧಾರದಲ್ಲಿ ಈಗ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ತಿಳಿಸಿತು.
ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿದ್ದು, ಕೇಂದ್ರದ ಪ್ರತಿಕ್ರಿಯೆ ಬಂದ ನಂತರ ನಾಲ್ಕು ದಿನಗಳಲ್ಲಿ ಅದಕ್ಕೆ ಉತ್ತರ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ನಿರ್ದೇಶನ ನೀಡಿ ಮುಂದಿನ ವಿಚಾರಣೆಯನ್ನು ಮೇ1ಕ್ಕೆ ನಿಗದಿಪಡಿಸಿದೆ.