ಚಂಡೀಗಡ (ಪಿಟಿಐ): ಹಿಂಸಾಪೀಡಿತ ಇರಾಕ್ನಲ್ಲಿ ಸಿಲುಕಿರುವ ಪಂಜಾಬಿನ 200 ಜನರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕರೆತರಲು ತಗಲುವ ವೆಚ್ಚ ಭರಿಸಲು ಪಂಜಾಬ್ ಸರ್ಕಾರ ನಿರ್ಧರಿಸಿದೆ.
ಸಂಕಷ್ಟದಲ್ಲಿರುವ ಕುಟುಂಬಗಳು ಇರಾಕ್ ದೇಶಕ್ಕೆ ಮಾಡಿರುವ ದೂರವಾಣಿ ಕರೆಗಳ ವೆಚ್ಚವನ್ನು ಸರ್ಕಾರದಿಂದ ಭರಿಸಲು ಮುಖ್ಯಮಂತ್ರಿ ಪ್ರಕಾಶ್ಸಿಂಗ್ ಬಾದಲ್ ನಿರ್ಧರಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಉಗ್ರರ ಬಳಿ ಒತ್ತೆಯಾಳುಗಳಾಗಿರುವ ಪಂಜಾಬಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಬಗ್ಗೆ ಹಾಗೂ ಇದಕ್ಕೆ ತಗಲುವ ವೆಚ್ಚ ಭರಿಸುವ ಕುರಿತು ಪ್ರಕಾಶ್ಸಿಂಗ್ ಬಾದಲ್ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ಮಾತುಕತೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.ಇರಾಕ್ನಲ್ಲಿ ಇರುವ ಭಾರತೀಯರ ಸುರಕ್ಷತೆ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಬಾದಲ್ ತೃಪ್ತಿ ವ್ಯಕ್ತಪಡಿಸಿದ್ದಾರೆ.