ನವದೆಹಲಿ: ಗೋ ರಕ್ಷಣೆ ಹೆಸರಿನಲ್ಲಿ ನಡೆಯುವ ದಾಳಿಗಳನ್ನು ತಡೆಯಲು ಜಿಲ್ಲೆಗೊಬ್ಬ ಹಿರಿಯ ಪೊಲೀಸ್ ಅಧಿಕಾರಿಯನ್ನು ನೇಮಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಅಕ್ಟೋಬರ್ 13ರ ಒಳಗೆ ಈ ಆದೇಶವನ್ನು ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
‘ಆಯಾ ಜಿಲ್ಲೆಗಳಲ್ಲಿ ನಡೆಯುವ ಗೋ ಸಂಬಂಧಿ ದಾಳಿಗಳಿಗೆ ಆ ಹಿರಿಯ ಪೊಲೀಸ್ ಅಧಿಕಾರಿಯೇ ಜವಾಬ್ದಾರರು. ಗೋ ರಕ್ಷಣೆ ಹೆಸರಿನಲ್ಲಿ ನಡೆದ ದಾಳಿಗಳಿಗೆ ಒಳಗಾದವರಿಗೆ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಜಾನುವಾರು ಸಾಗಣೆಯನ್ನು ಗುರಿಯಾಗಿಸಿಕೊಂಡು ಹೆದ್ದಾರಿಗಳಲ್ಲಿ ನಡೆಯುವ ದಾಳಿಗಳನ್ನು ತಡೆಯಲು ರಾಜ್ಯ ಸರ್ಕಾರಗಳು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಿವೆ ಎಂಬ ಬಗ್ಗೆಯೂ ವರದಿ ಸಲ್ಲಿಸಲು ನ್ಯಾಯಪೀಠ ಸೂಚನೆ ನೀಡಿದೆ.