ನವದೆಹಲಿ (ಪಿಟಿಐ): ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ (ಎಫ್ಡಿಐ)ಗೆ ಕೇರಳದಲ್ಲಿ ಅವಕಾಶ ನೀಡದೇ ಇರಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಹಾಗಾಗಿ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಕಾಂಗ್ರೆಸ್ ನೇತೃತ್ವದ ಆಡಳಿತ ಇರುವ ರಾಜ್ಯದಲ್ಲಿಯೇ ಅಪಸ್ವರ ವ್ಯಕ್ತವಾಗಿದೆ. `ರಾಜ್ಯದ ಹಿತಾಸಕ್ತಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ~ ಎಂದು ಮುಖ್ಯಮಂತ್ರಿ ಒಮ್ಮನ್ ಚಾಂಡಿ ತಿಳಿಸಿದ್ದಾರೆ.
`ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಬಹುವಿಧದ ವಸ್ತುಗಳಿಗೆ ಶೇ 51ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಹಾಗಾಗಿ ಕೇರಳದಲ್ಲಿ ಇದನ್ನು ಅನುಷ್ಠಾನಗೊಳಿಸುವುದಿಲ್ಲ~ ಎಂದು ಅವರು ಹೇಳಿದರು.
`ಕೇಂದ್ರದ ನಿರ್ಧಾರವನ್ನು ಅನುಷ್ಠಾನಗೊಳಿಸದೇ ಇರುವ ನಮ್ಮ ನಿರ್ಧಾರನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದೇವೆ~ ಎಂದು ಸ್ಪಷ್ಟಪಡಿಸಿದರು.
ಕಳೆದ ನವೆಂಬರ್ ತಿಂಗಳಿನಲ್ಲಿ ಈ ಕುರಿತು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಇದನ್ನು ಅನುಷ್ಠಾನಗೊಳಿಸದೇ ಇರುವ ಕೇರಳ ಸರ್ಕಾರದ ನಿರ್ಧಾರ ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ರಾಹುಲ್ ಅವರಿಗೆ ಮುಜಗರ ಉಂಟು ಮಾಡಿದೆ.