ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿಗಳಾದ ಆರ್.ಕೆ.ಚಂದೋಲಿಯ ಮತ್ತು ದೂರಸಂಪರ್ಕ ಮಾಜಿ ಕಾರ್ಯದರ್ಶಿ ಸಿದ್ಧಾರ್ಥ ಬೆಹುರಾ ಅವರ ಜಾಮೀನು ಅರ್ಜಿಯ ವಿಚಾರಣೆಗೆ ಸೋಮವಾರ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಿಬಿಐಗೆ ನೋಟಿಸ್ ನೀಡಿದೆ.
ಎ.ರಾಜಾ ಅವರ ಮಾಜಿ ಆಪ್ತ ಕಾರ್ಯದರ್ಶಿ ಚಂದೋಲಿಯ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ಈ ಹಿಂದೆ ದೆಹಲಿ ಹೈಕೋರ್ಟ್ ತಡೆ ನೀಡಿತ್ತು. ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಅವರನ್ನು ಒಳಗೊಂಡ ಪೀಠವು, ಹೈಕೋರ್ಟ್ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿತು.
ಈ ಹಿನ್ನೆಲೆಯಲ್ಲಿ ಚಂದೋಲಿಯ ಮುಂದಿನ ವಿಚಾರಣೆ ವರೆಗೆ ಜೈಲಿನಿಂದ ಹೊರಗೆ ಇರುವರು. 14 ಆರೋಪಿಗಳ ಪೈಕಿ 12 ಮಂದಿಗೆ ಈಗಾಗಲೇ ಜಾಮೀನು ನೀಡಲಾಗಿದೆ.
ಕಳೆದ ಡಿಸೆಂಬರ್ 1ರಂದು ವಿಶೇಷ ನ್ಯಾಯಾಲಯ ತಮಗೆ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ತಡೆ ನೀಡಿದ್ದನ್ನು ಪ್ರಶ್ನಿಸಿ ಚಂದೋಲಿಯ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ಪರಿಶೀಲಿಸಲೂ ಪೀಠ ಒಪ್ಪಿಕೊಂಡಿತ್ತು. ಬೆಹುರಾ ಕೂಡ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.