ಮುಂಬೈ ಮೇಲಿನ ಭಯೋತ್ಪಾದಕ ದಾಳಿ ನಡೆದ ನಾಲ್ಕು ವರ್ಷಗಳ ಬಳಿಕ ಮುಂಬೈ ಪೊಲೀಸ್ ಅಪರಾಧ ದಳದ ವಶಕ್ಕೆ ಜುಂದಾಲ್ ಲಭಿಸಿದಂತಾಗಿದೆ. 26/11ರ ದಾಳಿ, 2010ರ ಪುಣೆ ಜರ್ಮನ್ ಬೇಕರಿ ಸ್ಫೋಟ, ನಾಸಿಕ್ ಪೊಲೀಸ್ ತರಬೇತಿ ಅಕಾಡೆಮಿ ಮೇಲಿನ ದಾಳಿ ಮತ್ತು ಔರಂಗಾಬಾದ್ ಶಸ್ತ್ರಾಸ್ತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಸಲುವಾಗಿ ಪೊಲೀಸರು ಜುಂದಾಲ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಸರ್ಕಾರದ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ ಅವರು ಮುಂಬೈ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಜುಂದಾಲ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು ಆತನನ್ನು 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಆದರೆ ನ್ಯಾಯಾಲಯವು ಜುಲೈ 31ರ ವರೆಗೆ ಮಾತ್ರ ಜುಂದಾಲ್ನನ್ನು ಪೊಲೀಸ್ ವಶಕ್ಕೆ ನೀಡಿತು.