ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ಬಳಿಕ ಡಿ. 15ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನ ನಡೆಸುತ್ತಿಲ್ಲ ಎಂದು ವಿರೋಧ ಪಕ್ಷಗಳು ಭಾರಿ ಹುಯಿಲೆಬ್ಬಿಸುತ್ತಿವೆ.
ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜನವರಿ 5ರವರೆಗೆ ಅಧಿವೇಶನ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಧಿವೇಶನವು ಬಿಜೆಪಿಯ ಸಾಧ್ಯತೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಭಯದಿಂದ ಸರ್ಕಾರ ಅಧಿವೇಶನ ಮುಂದೂಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಈ ಆರೋಪವನ್ನು ಅಲ್ಲಗಳೆದಿದ್ದರು. ಚಳಿಗಾಲದ ಅಧಿವೇಶನ ನಡೆಸಲಾಗುವುದು. ಚುನಾವಣೆ ಮತ್ತು ಅಧಿವೇಶನವನ್ನು ಜತೆಯಾಗಿ ನಡೆಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.
ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಹಲವು ಬಾರಿ ಚಳಿಗಾಲದ ಅಧಿವೇಶನವನ್ನು ಮುಂದೂಡಲಾಗಿದೆ ಎಂದು ಬಿಜೆಪಿ ಹೇಳಿದೆ.
ವಿಧಾನಸಭೆ ಚುನಾವಣೆಯ ಕಾರಣಕ್ಕೆ ಚಳಿಗಾಲದ ಅಧಿವೇಶನವನ್ನು ಮೂರು ಬಾರಿ ಮುಂದೂಡಲಾಗಿರುವುದು ಸಂಸತ್ತಿನ ದಾಖಲೆಗಳಿಂದ ತಿಳಿದು ಬರುತ್ತದೆ. 2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರ ಇದ್ದಾಗ ಡಿಸೆಂಬರ್ 1ರಿಂದ ಚಳಿಗಾಲದ ಅಧಿವೇಶನ ಆರಂಭವಾಗಿತ್ತು. ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ಮರುದಿನ ಅಧಿವೇಶನ ಆರಂಭಿಸಲಾಗಿತ್ತು.
2008 ಮತ್ತು 2013ರಲ್ಲಿ ಯುಪಿಎ ಸರ್ಕಾರ ಇದ್ದಾಗಲೂ ಚಳಿಗಾಲದ ಅಧಿವೇಶನ ಮುಂದೂಡಿಕೆ ಆಗಿತ್ತು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಮತ್ತು ದೆಹಲಿ ವಿಧಾನಸಭೆ ಚುನಾವಣೆ ಬಳಿಕ ಅಧಿವೇಶನ ನಡೆಸಲಾಗಿತ್ತು.