ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರಸ್ತೆ ಗುಂಡಿಗಳಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ರಸ್ತೆ ಗುಂಡಿಗಳಿಗೆ ಬಲಿಯಾಗುವವರು ಹಾಗೂ ಭಾರೀ ಮಳೆಯಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ನಗರದಲ್ಲಿ ಹೆಚ್ಚುತ್ತಿದ್ದು ಈ ಬಗ್ಗೆ ವರದಿ ನೀಡುವಂತೆ ರಾಹುಲ್ ಗಾಂಧಿ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐವರದಿ ಮಾಡಿದೆ.
ಈ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿ ಹೇಳಿದೆ.
ರಸ್ತೆ ಗುಂಡಿಗಳಿಂದ ಮಾತ್ರವಲ್ಲದೆ ಬೆಂಗಳೂರಿನಲ್ಲಿ ಮಳೆಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ಸುರಿದ ಮಳೆಯಿಂದ ಐದು ಮಂದಿ ಮೃತಪಟ್ಟಿದ್ದಾರೆ.
ರಸ್ತೆ ನಿರ್ವಹಣೆ ವಿಷಯದಲ್ಲಿ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ (ಅ.12) ಬಿಜೆಪಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು.