ನವದೆಹಲಿ (ಪಿಟಿಐ): ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಆದಷ್ಟು ಬೇಗ ಅನುಮೋದನೆ ನೀಡುವಂತೆ ಎನ್ಡಿಎ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದರು.
ಮಹಿಳಾ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಬುಧವಾರ ಇಲ್ಲಿ ಮಾತನಾಡಿದ ಅವರು, ‘ನಾವು ಈಗ ವಿರೋಧ ಪಕ್ಷದಲ್ಲಿ ಇದ್ದರೂ ಮಹಿಳಾ ಮೀಸಲಾತಿ ಜಾರಿ ಆಗಬೇಕು ಎಂಬ ನಿರ್ಣಯಕ್ಕೆ ಬದ್ಧರಾಗಿದ್ದೇವೆ. ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯವನ್ನು ಮುಂದುವರಿಸುತ್ತೇವೆ’ ಎಂದರು.
ಸಂಸತ್ತು ಮತ್ತು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮಸೂದೆ 18 ವರ್ಷಗಳಿಂದ ನನೆಗುದಿಯಲ್ಲಿದೆ. 2004 ರಲ್ಲಿ ಯುಪಿಎ ಅಧಿಕಾರಕ್ಕೆ ಬಂದ ನಂತರ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಕಾಂಗ್ರೆಸ್ ಮುಂದಾ ಯಿತು. 2010ರಲ್ಲಿ ರಾಜ್ಯಸಭೆಯಲ್ಲಿ ಇದಕ್ಕೆ ಒಪ್ಪಿಗೆ ದೊರೆತರೂ, ಕೆಲವು ರಾಜಕೀಯ ಪಕ್ಷಗಳ ಅಸಹಕಾರ ದಿಂದಾಗಿ ಲೋಕಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯಲು ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದರು.
ನಕಲು: ಯುಪಿಎ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ನಕಲು ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಯುಪಿಎ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಆದರೆ, ಬಿಜೆಪಿಯ ಸುಳ್ಳು ಆಶ್ವಾಸನೆಗಳಿಗೆ ಮರುಳಾಗಿ ಜನರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದರು. ಆ ಆಶ್ವಾಸನೆಗಳು ಕಾರ್ಯರೂಪಕ್ಕೆ ಬರುವುದಿಲ್ಲ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದರು.
ಮಹಿಳಾ ಸಬಲೀಕರಣಕ್ಕೆ ರಾಜೀವ್ ಗಾಂಧಿ ಆದ್ಯತೆ ನೀಡಿದ್ದರು. ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳೆಯರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ ಎಂಬುದನ್ನು ಮನಗಂಡು ಪಂಚಾಯಿತಿಗಳಲ್ಲಿ ಮೀಸಲಾತಿ ಜಾರಿಗೊಳಿಸಿದರು. ರಾಷ್ಟ್ರೀಯ ಮಹಿಳಾ ಆಯೋಗ ರಚನೆ ಮಾಡಿದರು ಎಂದು ಅವರು ವಿವರಿಸಿದರು.
ಶಾಸನಸಭೆಗಳಲ್ಲೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲು ರಾಜೀವ್ ಗಾಂಧಿ ಪ್ರಯತ್ನಿಸಿದರು. ಆದರೆ, ಅವರ ನಿಧನದ ನಂತರ ಯಾರೊಬ್ಬರೂ ಈ ವಿಷಯಕ್ಕೆ ಒತ್ತು ನೀಡಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ‘ಸೋಲು – ಗೆಲುವು ಜೀವನದ ಭಾಗ. ಅಧಿಕಾರ ಇಲ್ಲದಿದ್ದರೂ ಸಿದ್ಧಾಂತಗಳಿಗೆ ಬದ್ಧರಾಗಿದ್ದೇವೆ. ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಗಳನ್ನು ಪ್ರಸ್ತಾಪಿಸಿದ ಅವರು, ಇವುಗಳ ವಿರುದ್ಧ ಧ್ವನಿ ಎತ್ತಬೇಕು. ನ್ಯಾಯಕ್ಕಾಗಿ ಹೋರಾಟ ಮಾಡಬೇಕು ಎಂದು ಹೇಳಿದರು. ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 70ನೇ ಜನ್ಮದಿನವಾದ ಬುಧವಾರ ಕಾಂಗ್ರೆಸ್ ಪಕ್ಷವು ದೊಡ್ಡಮಟ್ಟದ ಸಭೆಯನ್ನು ಆಯೋಜಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.