ಹೈದರಾಬಾದ್(ಐಎಎನ್ಎಸ್): ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ನಿರ್ಮಲಾ ಅವರನ್ನು ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿರುವ ಕುರಿತು ಮಂಗಳವಾರ ಅಧಿಕೃತವಾಗಿ ಘೋಷಿಸಲಾಯಿತು. ಆಂಧ್ರಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದ ಎನ್.ಜನಾರ್ದನ ರೆಡ್ಡಿ ಅವರು ಮೇ 9ರಂದು ಮೃತಪಟ್ಟ ನಂತರ ಈ ಸ್ಥಾನ ಖಾಲಿ ಉಳಿದಿತ್ತು.
ರಾಜ್ಯಸಭೆಗೆ ಜುಲೈ 3 ರಂದು ಚುನಾವಣೆ ನಡೆಯಬೇಕಿತ್ತು. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಸೋಮವಾರದ ವರೆಗೆ ನಿರ್ಮಲಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ನಿರ್ಮಲಾ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.