ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ನಲ್ಲಿ ಪ್ಲಾಸ್ಟಿಕ್ ಚೀಲ, ಲೋಟ, ತಟ್ಟೆ, ಬಾಟಲಿ ಮತ್ತು ಆಹಾರ ಪೊಟ್ಟಣಗಳ ಬಳಕೆ ನಿಷೇಧಿಸಬೇಕು ಎಂದು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಸೂಚಿಸಿದೆ.
ವಿಶ್ವಸಂಸ್ಥೆ ನೇತೃತ್ವದಲ್ಲಿ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಪರಿಸರ ದಿನಾಚರಣೆಗೆ ಈ ವರ್ಷ ಭಾರತ ಆತಿಥೇಯ ರಾಷ್ಟ್ರವಾಗಿದೆ ಎಂದು ಪರಿಸರ ಸಚಿವಾಲಯ ತಿಳಿಸಿದ ಬೆನ್ನಲ್ಲೇ ಯುಜಿಸಿ ಈ ಸೂಚನೆ ಹೊರಡಿಸಿದೆ.
‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲು ಹಾಗೂ ಸ್ವಚ್ಛ ಭಾರತ ಅಭಿಯಾನದ ಅಡಿ ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಸಾಮೂಹಿಕ ಚಟುವಟಿಕೆಗಳನ್ನು ಕೈಗೊಳ್ಳಬೇಕು’ ಎಂದು ಕುಲಪತಿಗಳಿಗೆ ರವಾನಿಸಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
‘ಎಲ್ಲಾ ರೀತಿಯ ಮಾಲಿನ್ಯ ತಡೆಗಟ್ಟಲು, ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡಲು ಜಾಗತಿಕ ಮಟ್ಟದಲ್ಲಿ ನಾಯಕತ್ವ ವಹಿಸಿಕೊಳ್ಳುವ ಭಾರತದ ಬದ್ಧತೆಯಲ್ಲಿ ಈ ಪ್ರತಿಷ್ಠಿತ ಕಾರ್ಯಕ್ರಮ ಮಹತ್ವದ ಹೆಜ್ಜೆ’ ಎಂದು ತಿಳಿಸಲಾಗಿದೆ.