ನವದೆಹಲಿ: ಪ್ರಚೋದನಕಾರಿ ಭಾಷಣಗಳಿಂದ ವಿವಾದಕ್ಕೆ ಗುರಿಯಾಗಿರುವ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಮತ್ತು ಸಮಾಜವಾದಿ ಪಕ್ಷದ ಅಜಂ ಖಾನ್ ಅವರಿಗೆ ಉತ್ತರ ಪ್ರದೇಶದಲ್ಲಿ ಯಾವುದೇ ಸಾರ್ವಜನಿಕ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.
ಈ ಇಬ್ಬರು ಸಮಾಜದ ಸಮುದಾಯಗಳಲ್ಲಿ ದ್ವೇಷ ಕೆರಳಿಸುವಂತಹ ತೀವ್ರ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿರುವ ಬಗ್ಗೆ ಆಯೋಗ ಆತಂಕ ವ್ಯಕ್ತಪಡಿಸಿದೆ.
ಈ ಇಬ್ಬರು ಪಾಲ್ಗೊಳ್ಳುವ ಅಥವಾ ಪಾಲ್ಗೊಳ್ಳುವ ನಿರೀಕ್ಷೆ ಇರುವ ಯಾವುದೇ ಸಾರ್ವಜನಿಕ ಸಭೆ, ಬಹಿರಂಗ ಮೆರವಣಿಗೆ, ಸಾರ್ವಜನಿಕ ಸಭೆ, ಸಾರ್ವಜನಿಕ ರ್ಯಾಲಿ, ರಸ್ತೆ ಯಾತ್ರೆಗಳನ್ನು ನಡೆಸಲು ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಆಯೋಗ ನಿರ್ದೇಶನ ನೀಡಿದೆ.
ಈ ಇಬ್ಬರ ವಿರುದ್ಧದ, ವಿಶೇಷವಾಗಿ ಅಜಂ ಖಾನ್ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ತಡ ಮಾಡುತ್ತಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸರ್ಕಾರವನ್ನು ಆಯೋಗ ಇದೇ ವೇಳೆ ತರಾಟೆಗೆ ತೆಗೆದುಕೊಂಡಿದೆ. ಈ ಇಬ್ಬರ ವಿರುದ್ಧ ಕ್ರಿಮಿನಲ್ ವಿಚಾರಣೆ ಆರಂಭಿಸುವಂತೆಯೂ ಆಯೋಗ ಸೂಚಿಸಿದೆ.