ಗುವಾಹಟಿ: ಅಸ್ಸಾಂ ಹಾಗೂ ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರಿ ಪ್ರವಾಹದಿಂದ ಸುಮಾರು ಐದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ.
ಅಸ್ಸಾಂನಲ್ಲಿ ಶನಿವಾರ ಪ್ರವಾಹಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ್ದವರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸುತ್ತಿದ್ದಾರೆ.
ಶನಿವಾರ ಸಂಜೆಯವರೆಗೆ ಅಸ್ಸಾಂನ 1039 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಯಿದ್ದು, ಸುಮಾರು 50 ಸಾವಿರ ಹೆಕ್ಟೇರ್ಗಳಷ್ಟು ಕೃಷಿ ಭೂಮಿ ನೀರಿನಲ್ಲಿ ಮುಳುಗಿದೆ ಎಂದು ಅಸ್ಸಾಂ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ವಿವಿಧ ಜಿಲ್ಲೆಗಳಲ್ಲಿ 75 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 21 ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದಿದೆ.
ಗೋಡೆ ಕುಸಿದು 3 ಸಾವು (ಡೆಹ್ರಾಡೂನ್ ವರದಿ):ಉತ್ತರಾಖಂಡ ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಜೀವಂತವಾಗಿ ಸಮಾಧಿಯಾಗಿರುವ ಘಟನೆ ತೆಹ್ರಿ ಜಿಲ್ಲೆಯಲ್ಲಿ ನಡೆದಿದೆ.
ತೆಹ್ರಿಯ ಘಾನ್ಸಾಲಿ ಪ್ರದೇಶದ ಪುರ್ವಾಲಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸುಮಾರು 4 ಗಂಟೆಗೆ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿ ನಿದ್ರಿಸುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಇಟಾನಗರ ವರದಿ (ಪಿಟಿಐ): ಶನಿವಾರ ಧಾರಾಕಾರ ಮಳೆ ಸುರಿದ ಕಾರಣ ಅರುಣಾಚಲ ಪ್ರದೇಶದ ನದಿಗಳು ಉಕ್ಕಿ ಹರಿದಿದ್ದು, ಕೆಲ ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ.