ನವದೆಹಲಿ(ಪಿಟಿಐ): 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾಸಿಂಗ್ಗೆ ಎನ್ಐಎ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ನಿರಾಕರಿಸಿದೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿ 6 ವರ್ಷ ಕಳೆದಿದೆ.
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಎಸ್.ಪಿ.ಪುರೋಹಿತ್ ಸೇರಿದಂತೆ ಆರು ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೊಕಾ) ಅಡಿ ಆರೋಪ ಹೊರಿಸಲಾಗಿತ್ತು.
ಉತ್ತರಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶವಾದ ಮಾಲೆಗಾಂವ್ನಲ್ಲಿ 2008ರ ಸೆಪ್ಟೆಂಬರ್ 29ರಂದು ಸ್ಫೋಟ ನಡೆದಿತ್ತು.
ಮಾಲೆಗಾಂವ್ನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿರುವುದರಿಂದ ಸ್ಫೋಟಕ್ಕೆ ಈ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದು 4,000 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿತ್ತು. ಪುರೋಹಿತ್, ಪ್ರಜ್ಞಾ, ಇನ್ನೊಬ್ಬ ಆರೋಪಿ ಸ್ವಾಮಿ ದಯಾನಂದ ಪಾಂಡೆ ಈ ಸ್ಫೋಟದ ಪ್ರಮುಖ ಸಂಚುಕೋರರು ಎಂದೂ ಅದರಲ್ಲಿ ತಿಳಿಸಲಾಗಿತ್ತು.