ಧರ್ಮಶಾಲಾ (ಹಿಮಾಚಲ ಪ್ರದೇಶ): ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಈ ದೇಶದ ರೈತರನ್ನು ದಾರಿತಪ್ಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಹಿಮಾಚಲ ಪ್ರದೇಶ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗುರುವಾರ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಅವರು ಮಾತನಾಡಿದರು.
ಯೋಧರಿಗಾಗಿ ‘ಒಂದು ಶ್ರೇಣಿ, ಒಂದು ಪಿಂಚಣಿ’ ಯೋಜನೆಯನ್ನು ನಿಜವಾದ ಅರ್ಥದಲ್ಲಿ ಜಾರಿಗೆ ತಂದಿದ್ದು ಎನ್ಡಿಎ ಸರ್ಕಾರ. ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ಕೂಡ ಯೋಧರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದವು ಎಂದು ಆರೋಪಿಸಿದರು.
‘ಪಕ್ಷದ ಸಂಘಟನೆಗಾಗಿ ನಾನು ಹಲವಾರು ವರ್ಷ ಇಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಹಿಮಾಚಲ ಪ್ರದೇಶ ಕೂಡ ನನ್ನ ಮನೆ’ ಎಂದರು.
ಮುಖ್ಯಮಂತ್ರಿ ಜೈರಾಂ ಠಾಕೂರ್, ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್, ಕೇಂದ್ರ ಸಚಿವ ಜೆ.ಪಿ. ನಡ್ಡಾ, ಸಂಸದ ಶಾಂತಕುಮಾರ್ ವೇದಿಕೆಯಲ್ಲಿದ್ದರು.