ನವದೆಹಲಿ (ಪಿಟಿಐ): ಕಲಬೆರಕೆಯುಕ್ತ ಹಾಲು ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವವರಿಗೆ ಜೀವಾವಧಿ ಶಿಕ್ಷೆ ನೀಡುವುದಕ್ಕೆ ಒಲವು ತೋರಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕಾನೂನುಗಳಿಗೆ ಸೂಕ್ತ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಆಹಾರ ಸುರಕ್ಷತಾ ಕಾಯ್ದೆಯಲ್ಲಿ ಉಲ್ಲೇಖಿಸಿರುವ ಆರು ತಿಂಗಳ ಜೈಲು ಶಿಕ್ಷೆ ಅತ್ಯಂತ ಕಡಿಮೆಯಾಯಿತು ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್ ಮತ್ತು ಕೆ. ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಸರ್ಕಾರಗಳು ಮಾಡಿರುವಂತೆ ಕಾನೂನುಗಳಿಗೆ ತಿದ್ದುಪಡಿ ತನ್ನಿ ಎಂದು ರಾಜ್ಯಗಳಿಗೆ ಸೂಚಿಸಿತು.
ವಿವಿಧ ರಾಜ್ಯಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಲಬೆರಕೆಯುಕ್ತ ಹಾಲಿನ ಉತ್ಪಾದನೆ ಮತ್ತು ಮಾರಾಟಕ್ಕೆ ತಡೆ ಒಡ್ಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.