ಬೆಂಗಳೂರು: ಇತ್ತೀಚೆಗೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ₹100 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದು ಯಾರಿಗೆ ಸೇರಿದ ಹಣ ಎಂಬುದು ಗೊತ್ತಾಗಬೇಕಾದರೆ ಇಡಿ ಅಥವಾ ಸಿಬಿಐನಿಂದಲೇ ತನಿಖೆ ಆಗಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಚುನಾವಣೆಗೆ ಬಳಸಲೆಂದೇ ಹಣವನ್ನು ಸಂಗ್ರಹಿಸಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಅದರ ಬದಲು ಅನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮತ್ತು ಲೋಕಸಭೆ ಚುನಾವಣೆಗಾಗಿ ಭಾರಿ ಪ್ರಮಾಣದಲ್ಲಿ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದೆ. ಹೀಗಾಗಿ ಜನರಿಂದಲೇ ಲೂಟಿ ಮಾಡಲಾರಂಭಿಸಿದೆ ಎಂದು ಅವರು ಹರಿಹಾಯ್ದರು.