ಬೆಂಗಳೂರು: ರಾಜ್ಯದಲ್ಲಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, 548 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನೀರಿನ ಸಮಸ್ಯೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘1,659 ಗ್ರಾಮಗಳಲ್ಲಿ 2,098 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡು ಕುಡಿಯುವ ನೀರು ಒದಗಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 480 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಅನುಷ್ಠಾನಗೊಂಡಿವೆ. ಅವುಗಳ ಮೂಲಕ 6,828 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ನದಿ ಮತ್ತು ಜಲಾಶಯಗಳ ನೀರಿನ ಮೂಲ ಆಧರಿಸಿದ ಬಹುಗ್ರಾಮ ಯೋಜನೆಗಳಿಗೆ ನೀರಿನ ಕೊರತೆ ಎದುರಾಗುತ್ತದೆ. ಒಂದು ವಾರದ ಅವಧಿಯಲ್ಲಿ ಅಂತಹ 37 ಯೋಜನೆಗಳು ನೀರಿನ ಕೊರತೆಯಿಂದ ಸ್ಥಗಿತವಾಗಿವೆ. ಇದರಿಂದ 413 ಗ್ರಾಮಗಳಿಗೆ ಕುಡಿಯುವ ನೀರಿನ ಕೊರತೆ ಉದ್ಭವಿಸಿದೆ ಎಂದು ವಿವರ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ತಗ್ಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಲ್ಲಿ ಲಭ್ಯವಿರುವ ಅನುದಾನವನ್ನು ಆದ್ಯತೆ ಮೇರೆ ಬಳಸಿಕೊಳ್ಳಲಾಗುತ್ತಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುದಾನವನ್ನೂ ಬಳಸಲಾಗುತ್ತಿದೆ. ಸಮಸ್ಯೆ ಇರುವ ಪ್ರದೇಶಗಳಲ್ಲಿ ನೀರು ಪೂರೈಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 2024–25ನೇ ಆರ್ಥಿಕ ವರ್ಷದ ಅನುದಾನದಲ್ಲಿ ₹ 20 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.