ಬೆಂಗಳೂರು: ಹತ್ತು ವರ್ಷಗಳಿಂದ ನನೆಗುದಿಯಲ್ಲಿರುವ 2.23 ಲಕ್ಷ ಮನೆಗಳನ್ನು ಉಚಿತವಾಗಿ ಹಂಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ಗಾಂಧಿ ವಸತಿ ನಿಗಮ ವತಿಯಿಂದ ಬಡವರಿಗೆ ಸೂರು ಕಲ್ಪಿಸಲು ರೂಪಿಸಿದ್ದ ಯೋಜನೆ ಫಲಾನುಭವಿಗಳ ವಂತಿಗೆ ಪಾವತಿ ಆಗದೇ ನನೆಗುದಿಗೆ ಬಿದ್ದಿದ್ದು, ಇದೀಗ ಸರ್ಕಾರವೇ ವಂತಿಗೆಯ ಸಂಪೂರ್ಣ ವೆಚ್ಚ ಭರಿಸಲಿದೆ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರದ ಐದು ಗ್ಯಾರಂಟಿ ಜತೆಗೆ ಇದು ಆರನೇ ಗ್ಯಾರಂಟಿ ಆಗಿದ್ದು, ಅಪೂರ್ಣ ಆಗಿರುವ 2.32 ಲಕ್ಷ ಮನೆ ಮುಂದಿನ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ವೇದಿಕೆಯಲ್ಲೇ 2.42 ಲಕ್ಷ ಮನೆ ಉಚಿತವಾಗಿ ನೀಡುವ ಭರವಸೆ ನೀಡಿದ್ದು, ಮುಂದಿನ ವಾರ ಹಣಕಾಸು ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ಜಮೀರ್ ಹೇಳಿದರು.