ಬೆಳಗಾವಿ: ‘ಕಾಂಗ್ರೆಸ್ನಲ್ಲಿರುವ 3–4 ಮಂದಿ ಅತೃಪ್ತ ಶಾಸಕರು ರೆಸಾರ್ಟ್ ರಾಜಕಾರಣ ನಡೆಸುತ್ತಿದ್ದಾರೆ. ಅವರೀಗ ಎಲ್ಲೆಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದನ್ನು ಹುಡುಕಬೇಕು’ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘3-4 ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆಪರೇಷನ್ ಕಮಲದ ಚೆಂಡು ಈಗ ಬಿಜೆಪಿ ಹಾಗೂ ಅತೃಪ್ತ ಶಾಸಕರ ಬಳಿ ಇದೆ. ಆದರೆ, ನಮ್ಮ ಸರ್ಕಾರ ಸುರಕ್ಷಿತವಾಗಿದೆ. ನಾಲ್ಕು ವರ್ಷ ಸುಭದ್ರವಾಗಿರುತ್ತದೆ’ ಎಂದು ಪ್ರತಿಕ್ರಿಯಿಸಿದರು.
‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಇಲ್ಲ. ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವ ಅವಶ್ಯವಿಲ್ಲ. ಅವರೊಂದಿಗೆ ಕಾಂಗ್ರೆಸ್ ಪಕ್ಷವಿದೆ ಎನ್ನುವುದನ್ನು ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇವೆ’ ಎಂದರು.
‘ಸರ್ಕಾರ ಉಳಿಸಲು ಕೆಲವು ಸಚಿವರಿಂದ ರಾಜೀನಾಮೆ ಪಡೆಯುವುದು, ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ’ ಎಂದು ತಿಳಿಸಿದರು.