ಬೆಂಗಳೂರು: ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಯವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಈ ವಿಷಯ ತಿಳಿಸಿದರು.
ಏಳನೇ ವೇತನ ಆಯೋಗ ರಚನೆ ಆಗಿ 12 ತಿಂಗಳಾಗಿದೆ. ಮಾರ್ಚ್ವರೆಗೆ ಕಾಲಾವಧಿ ವಿಸ್ತರಿಸಲಾಗಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಘೋಷಣೆ ಆಗುವುದಕ್ಕೆ ಮೊದಲೇ ವೇತನ ಪರಿಷ್ಕರಣೆಯನ್ನು ಘೋಷಿಸಬೇಕು ಎಂದು ನಿಯೋಗ ಮನವಿ ಮಾಡಿತು.
ಹೊಸ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿದ್ದ 11,366 ಜನರನ್ನು ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸುವಂತೆ ಷಡಾಕ್ಷರಿ ಕೋರಿದರು.
ತೀವ್ರ ಸ್ವರೂಪದ ಏಳು ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದೂ ಅವರು ಮನವಿ ಮಾಡಿದರು. ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.