ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಗದ್ದಿಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದು, ಊಟ ಮಾಡಿದ 95 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ನಂದಿಪುರ ಶಶಿಧರನ ಊಟದ ತಟ್ಟೆಯಲ್ಲಿ ಹಲ್ಲಿ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಆತ, ಶಿಕ್ಷಕರು ಮತ್ತು ಸಹಪಾಠಿಗಳಿಗೆ ವಿಷಯ ತಿಳಿಸಿದ್ದಾನೆ. ಅದಾಗಲೇ ವಿದ್ಯಾರ್ಥಿಗಳೆಲ್ಲ ಊಟ ಮುಗಿಸಿದ್ದರು.
ಇದಾದ ಕೆಲ ಸಮಯದ ಬಳಿಕ ಹಲವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಎಲ್ಲ 95 ವಿದ್ಯಾರ್ಥಿಗಳನ್ನೂ ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ 49 ಬಾಲಕರು, 46 ಮಂದಿ ಬಾಲಕಿಯರು ಇದ್ದಾರೆ.
ಗುಂಡೇಟಿಗೆ ಬೇಟೆಗಾರ ಬಲಿ
ಮಡಿಕೇರಿ: ತಾಲ್ಲೂಕಿನ ಭಾಗಮಂಡಲ ವ್ಯಾಪ್ತಿಯ ಮುಂಡ್ರೋಟು ಅರಣ್ಯ ಪ್ರದೇಶದಲ್ಲಿ ಎರಡು ಬೇಟೆಗಾರರ ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಬೇಟೆಗಾರರೊಬ್ಬರು ಮೃತಪಟ್ಟಿದ್ದಾರೆ.
ಕೇರಳದ ತಳಿಪರಂಬ ಮಿನಂಕೇರಿ ನಿವಾಸಿ ಜಾರ್ಜ್ (52) ಗುಂಡೇಟಿಗೆ ಬಲಿಯಾದವರು.
ಮಂಗಳವಾರ ರಾತ್ರಿ ಎರಡು ಗುಂಪುಗಳು ಪ್ರತ್ಯೇಕವಾಗಿ ಬೇಟೆಗೆ ತೆರಳಿದ್ದವು ಎನ್ನಲಾಗಿದೆ. ಅರಣ್ಯ ಪ್ರದೇಶದಲ್ಲಿ ಗುಂಪುಗಳು ಎದುರಾದ ವೇಳೆ ಮಾತಿನ ಚಕಮಕಿ ನಡೆದಿತ್ತು. ಘಟನೆಯಿಂದ ಆಕ್ರೋಶಗೊಂಡ ಒಂದು ಗುಂಪಿನ ಸದಸ್ಯರು ಜಾರ್ಜ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಾ ಕಾರಂಜಿ
ಮೈಸೂರು: ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಡಿ. 15ರಿಂದ 17ರ ವರೆಗೆ ಅರಮನೆಗಳ ನಗರಿಯಲ್ಲಿ ನಡೆಯಲಿದ್ದು, 34 ಶೈಕ್ಷಣಿಕ ಜಿಲ್ಲೆಗಳ 1,730 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿದೆ. ವಿದ್ಯಾರ್ಥಿಗಳು, ನೋಡಲ್ ಅಧಿಕಾರಿಗಳು, ಶಿಕ್ಷಕರು, ತೀರ್ಪುಗಾರರು ಸೇರಿದಂತೆ 3000 ಮಂದಿ ಪಾಲ್ಗೊಳ್ಳಲಿದ್ದಾರೆ. ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು 8ರಿಂದ 10ನೇ ತರಗತಿ ಹಾಗೂ ಕಲೋತ್ಸವ ಸ್ಪರ್ಧೆಗಳನ್ನು 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ.
‘ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದಪಾರಾಗಿದ್ದಾರೆ’ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಶಂಕರ ನಾಯ್ಕ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.