<p><strong>ಬೆಂಗಳೂರು</strong>: ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲ ಎಂಬುದನ್ನು ಚುನಾವಣೆಯ ಫಲಿತಾಂಶ ಸಾಬೀತುಪಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ’ ಎಂದರು.</p><p>‘ರಾಜ್ಯದಲ್ಲಿ ನಾವು ಒಂದು ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ’ ಎಂದರು.</p>.<p>‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ, ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ (ಕನಕಪುರ) 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಆಗಿದೆ. ಇದರಿಂದ ನಾವು ಪಾಠ ಕಲಿಯುತ್ತೇವೆ. ವೈಯಕ್ತಿಕವಾಗಿ ಕೆಲವು ಅನುಮಾನಗಳಿವೆ. ಆದರೂ ಜನರ ತೀರ್ಪನ್ನು ಗೌರವಿಸುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಜನ ನಮಗೆ ಆಶೀರ್ವಾದ ನೀಡಿದ್ದಾರೆ. ಮನ್ಸೂರ್ ಅಲಿ ಖಾನ್ ಅವರು ಕೊನೆ ಹಂತದಲ್ಲಿ ಸೋಲನುಭವಿಸಿದ್ದಾರೆ. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ’ ಎಂದರು.</p><p>‘ಮೋದಿ ಅವರ ಜನಪ್ರಿಯತೆ ಕುಗ್ಗಿರುವುದು ಸಾಬೀತಾಗಿದೆ. ಹಿಂದಿ ಭಾಷಿಗರ ಭಾಗದಲ್ಲೂ ಕುಗ್ಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಬೇಕು. ನನ್ನ ಕ್ಷೇತ್ರದಲ್ಲಿ ನನಗೆ ಹಿನ್ನಡೆಯಾಗಿದ್ದಂತೆ ಅಯೋಧ್ಯೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ 303 ಕ್ಷೇತ್ರ ಗೆದ್ದಿದ್ದ ಬಿಜೆಪಿ 243 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ನಿಚ್ಚಳ ಬಹುಮತ ಪಡೆದಿಲ್ಲ. ಎನ್ಡಿಎ ಕೂಡ ಹೇಳಿಕೊಂಡಿದ್ದ ಸಾಧನೆ ಮಾಡಿಲ್ಲ. ಬೇರೆ ಪಕ್ಷಗಳ ಮೇಲೆ ಅವಲಂಬಿತವಾಗಿವೆ’ ಎಂದರು.</p><p>ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ ಎಂಬುದು ಸಾಬೀತಾಗಿದೆ: ‘10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ 100ರ ಗಡಿ ದಾಟಿದ್ದು, ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ತೋರಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೊ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್. ಎಂ. ಕೃಷ್ಣ ಅವರ ಸರ್ಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ’ ಎಂದರು.</p><p>‘ಗ್ಯಾರಂಟಿ ಯೋಜನೆ ಕೈಹಿಡಿಯಲಿಲ್ಲವೇ, ಈ ಫಲಿತಾಂಶದಿಂದ ತೃಪ್ತಿಯಾಗಿದ್ದೀರಾ’ ಎಂದು ಕೇಳಿದಾಗ, ‘ಈಗಲೇ ಆ ರೀತಿ ಹೇಳಲು ಸಾಧ್ಯವಿಲ್ಲ. ಕನಿಷ್ಠ 14 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಭಾವಿಸಿದ್ದೆವು. ಬೆಂಗಳೂರು, ಮುಂಬೈ ಕರ್ನಾಟಕ ಸೇರಿದಂತೆ ಇನ್ನು ಕೆಲವು ಕಡೆ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲ. ಯಾವ ವರ್ಗ ಯಾಕೆ ನಮ್ಮಿಂದ ದೂರವಾಗಿದೆ ಎಂದು ಪರಿಶೀಲಿಸುತ್ತೇವೆ. ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಕೈ ಹಿಡಿದಿಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದರು.</p><p>ಚುನಾವಾಣೊತ್ತರ ಸಮೀಕ್ಷೆಗಳು ಸುಳ್ಳಾಗಿರುವ ಬಗ್ಗೆ ಕೇಳಿದಾಗ, ‘ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದೆ. ನಮಗೆ ಎರಡಂಕಿ ಸ್ಥಾನ ಬರಲಿದೆ ಎಂದು ಭಾವಿಸಿದ್ದೆವು. ಕೊನೆಕ್ಷಣದವರೆಗೂ ನಾವು ಎರಡಂಕಿ ಸ್ಥಾನ ಪಡೆದಿದ್ದೆವು. ಕೆಲವು ಕೆಲಸಗಳಿಗೆ ಮತ ಬರುತ್ತವೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಮತ ಬಂದಿಲ್ಲ’ ಎಂದರು.</p><p>ಕೇಂದ್ರದಲ್ಲಿ ಅತಂತ್ರದ ಪರಿಸ್ಥಿತಿ ಬಗ್ಗೆ ಕೇಳಿದಾಗ, ‘ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನುಬೇಕಾದರೂ ನಡೆಯಬಹುದು’ ಎಂದರು.</p><p>ರಾಹುಲ್ ಗಾಂಧಿ ಅವರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಕೇಳಿದಾಗ ‘ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಪ್ರಿಯಾಂಕಾ ಗಾಂಧಿ ಅವರು ನಿರಂತರ ಪ್ರಚಾರ ಮಾಡಿದ್ದಾರೆ’ ಎಂದರು.</p><p>‘ಡಿ.ಕೆ ಸಹೋದರರ ವಿರುದ್ಧ ಬಿಜೆಪಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಅಭಿಯಾನ ಯಶಸ್ವಿ ಆಗಿದೆಯೇ’ ಎಂದು ಕೇಳಿದಾಗ, ‘ಯಶಸ್ಸು ಆಗಿರಬಹುದು, ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲ ಎಂಬುದನ್ನು ಚುನಾವಣೆಯ ಫಲಿತಾಂಶ ಸಾಬೀತುಪಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ’ ಎಂದರು.</p><p>‘ರಾಜ್ಯದಲ್ಲಿ ನಾವು ಒಂದು ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ’ ಎಂದರು.</p>.<p>‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ, ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ (ಕನಕಪುರ) 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಆಗಿದೆ. ಇದರಿಂದ ನಾವು ಪಾಠ ಕಲಿಯುತ್ತೇವೆ. ವೈಯಕ್ತಿಕವಾಗಿ ಕೆಲವು ಅನುಮಾನಗಳಿವೆ. ಆದರೂ ಜನರ ತೀರ್ಪನ್ನು ಗೌರವಿಸುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಜನ ನಮಗೆ ಆಶೀರ್ವಾದ ನೀಡಿದ್ದಾರೆ. ಮನ್ಸೂರ್ ಅಲಿ ಖಾನ್ ಅವರು ಕೊನೆ ಹಂತದಲ್ಲಿ ಸೋಲನುಭವಿಸಿದ್ದಾರೆ. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ’ ಎಂದರು.</p><p>‘ಮೋದಿ ಅವರ ಜನಪ್ರಿಯತೆ ಕುಗ್ಗಿರುವುದು ಸಾಬೀತಾಗಿದೆ. ಹಿಂದಿ ಭಾಷಿಗರ ಭಾಗದಲ್ಲೂ ಕುಗ್ಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಬೇಕು. ನನ್ನ ಕ್ಷೇತ್ರದಲ್ಲಿ ನನಗೆ ಹಿನ್ನಡೆಯಾಗಿದ್ದಂತೆ ಅಯೋಧ್ಯೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ 303 ಕ್ಷೇತ್ರ ಗೆದ್ದಿದ್ದ ಬಿಜೆಪಿ 243 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ನಿಚ್ಚಳ ಬಹುಮತ ಪಡೆದಿಲ್ಲ. ಎನ್ಡಿಎ ಕೂಡ ಹೇಳಿಕೊಂಡಿದ್ದ ಸಾಧನೆ ಮಾಡಿಲ್ಲ. ಬೇರೆ ಪಕ್ಷಗಳ ಮೇಲೆ ಅವಲಂಬಿತವಾಗಿವೆ’ ಎಂದರು.</p><p>ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ ಎಂಬುದು ಸಾಬೀತಾಗಿದೆ: ‘10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ 100ರ ಗಡಿ ದಾಟಿದ್ದು, ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ತೋರಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೊ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್. ಎಂ. ಕೃಷ್ಣ ಅವರ ಸರ್ಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ’ ಎಂದರು.</p><p>‘ಗ್ಯಾರಂಟಿ ಯೋಜನೆ ಕೈಹಿಡಿಯಲಿಲ್ಲವೇ, ಈ ಫಲಿತಾಂಶದಿಂದ ತೃಪ್ತಿಯಾಗಿದ್ದೀರಾ’ ಎಂದು ಕೇಳಿದಾಗ, ‘ಈಗಲೇ ಆ ರೀತಿ ಹೇಳಲು ಸಾಧ್ಯವಿಲ್ಲ. ಕನಿಷ್ಠ 14 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಭಾವಿಸಿದ್ದೆವು. ಬೆಂಗಳೂರು, ಮುಂಬೈ ಕರ್ನಾಟಕ ಸೇರಿದಂತೆ ಇನ್ನು ಕೆಲವು ಕಡೆ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲ. ಯಾವ ವರ್ಗ ಯಾಕೆ ನಮ್ಮಿಂದ ದೂರವಾಗಿದೆ ಎಂದು ಪರಿಶೀಲಿಸುತ್ತೇವೆ. ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಕೈ ಹಿಡಿದಿಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದರು.</p><p>ಚುನಾವಾಣೊತ್ತರ ಸಮೀಕ್ಷೆಗಳು ಸುಳ್ಳಾಗಿರುವ ಬಗ್ಗೆ ಕೇಳಿದಾಗ, ‘ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದೆ. ನಮಗೆ ಎರಡಂಕಿ ಸ್ಥಾನ ಬರಲಿದೆ ಎಂದು ಭಾವಿಸಿದ್ದೆವು. ಕೊನೆಕ್ಷಣದವರೆಗೂ ನಾವು ಎರಡಂಕಿ ಸ್ಥಾನ ಪಡೆದಿದ್ದೆವು. ಕೆಲವು ಕೆಲಸಗಳಿಗೆ ಮತ ಬರುತ್ತವೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಮತ ಬಂದಿಲ್ಲ’ ಎಂದರು.</p><p>ಕೇಂದ್ರದಲ್ಲಿ ಅತಂತ್ರದ ಪರಿಸ್ಥಿತಿ ಬಗ್ಗೆ ಕೇಳಿದಾಗ, ‘ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನುಬೇಕಾದರೂ ನಡೆಯಬಹುದು’ ಎಂದರು.</p><p>ರಾಹುಲ್ ಗಾಂಧಿ ಅವರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಕೇಳಿದಾಗ ‘ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಪ್ರಿಯಾಂಕಾ ಗಾಂಧಿ ಅವರು ನಿರಂತರ ಪ್ರಚಾರ ಮಾಡಿದ್ದಾರೆ’ ಎಂದರು.</p><p>‘ಡಿ.ಕೆ ಸಹೋದರರ ವಿರುದ್ಧ ಬಿಜೆಪಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಅಭಿಯಾನ ಯಶಸ್ವಿ ಆಗಿದೆಯೇ’ ಎಂದು ಕೇಳಿದಾಗ, ‘ಯಶಸ್ಸು ಆಗಿರಬಹುದು, ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>