ಶಿಕಾರಿಪುರ: ತಾಲ್ಲೂಕಿನ ಎ–ಅಣ್ಣಾಪುರ ಗ್ರಾಮದಲ್ಲಿ ಸತ್ಯನಾರಾಯಣ ಪೂಜೆಯ ಪ್ರಸಾದ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಚಿಕಿತ್ಸೆ ನೀಡಲಾಯಿತು.
ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸತ್ಯನಾರಾಯಣ ಪೂಜಾ ಕಾರ್ಯದಲ್ಲಿ ಊಟ ಸೇವಿಸಿದ್ದ ಗ್ರಾಮಸ್ಥರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಶನಿವಾರ ರಾತ್ರಿ ಹಾಗೂ ಭಾನುವಾರ ವಾಂತಿ ಭೇದಿಯಿಂದ ಬಳಲುತ್ತಿದ್ದ ಗ್ರಾಮಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಗ್ರಾಮಕ್ಕೆ ಆರೋಗ್ಯ ಇಲಾಖೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಶಂಕರಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ನಾಗಲೀಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಗ್ರಾಮಸ್ಥರು ಆತಂಕ ಪಡುವ ಅಗತ್ಯ ಇಲ್ಲ. ಆದರೆ ದೇವರ ಕಾರ್ಯ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಊಟ ತಯಾರಿಸುವಾಗ ಜಾಗೃತಿ ವಹಿಸಬೇಕು. ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಉಪಯೋಗಿಸಬೇಕು. ಆಹಾರದಲ್ಲಿನ ವ್ಯತ್ಯಾಸದಿಂದ ಹೀಗಾಗಿದೆ’ ಎಂದು ವೈದ್ಯಾಧಿಕಾರಿ ಡಾ.ಮಂಜುನಾಥ್ ನಾಗಲೀಕರ್ ತಿಳಿಸಿದರು.