ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಿ.ಕೆ. ಶಿವಕುಮಾರ್

Published 5 ಮಾರ್ಚ್ 2024, 8:24 IST
Last Updated 5 ಮಾರ್ಚ್ 2024, 8:24 IST
ಅಕ್ಷರ ಗಾತ್ರ

ಬೆಂಗಳೂರು: 'ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪಾಕಿಸ್ತಾನ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದರು' ಎಂದರು.

'ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು. ಆದರೆ, ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದರು.

'ಕೆಲವು ಸಚಿವರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ' ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, 'ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೊ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ ವರದಿ ಮುಖ್ಯ. ಈ ಪ್ರಕರಣದ ತನಿಖೆಗಾಗಿ ಧ್ವನಿ ಮಾದರಿ ನೀಡಬೇಕು. ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಂಡ್ಯದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದ್ದ ಪ್ರಕರಣವನ್ನು ತನಿಖೆ ಮಾಡುತ್ತೇವೆ. ಬಿಜೆಪಿ ಸ್ನೇಹಿತರು ಅದಕ್ಕೂ ಉತ್ತರ ನೀಡಬೇಕು' ಎಂದು ತಿಳಿಸಿದರು.

'ಇದರಿಂದ ಪಕ್ಷಕ್ಕೆ ಮುಜುಗರ ಆಗುವುದಿಲ್ಲವೇ' ಎಂದು ಕೇಳಿದಾಗ, 'ನನ್ನ ಪ್ರಕಾರ ಇಲ್ಲಿ ಯಾರೂ ತಪ್ಪು ಮಾಡಿಲ್ಲ. ಆದರೆ ತನಿಖೆ ಪ್ರಕ್ರಿಯೆಯಲ್ಲಿದೆ' ಎಂದು ತಿಳಿಸಿದರು.

‘ಕುಡಿಯುವ ನೀರಿನ ಕೊರತೆ ಗಂಭೀರವಾಗಿ ಪರಿಗಣಿಸಿದ್ದೇವೆ’

'ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದೇವೆ. ನಾವು ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ಗಳನ್ನು ವಶಕ್ಕೆ ಪಡೆಯುತ್ತಿದ್ದೇವೆ. ಎಲ್ಲೆಲ್ಲಿ ನೀರಿನ ಲಭ್ಯತೆ ಇದೆ ಎಂದು ಗುರುತಿಸುತ್ತಿದ್ದೇವೆ. ಇನ್ನು ಕಾವೇರಿ 5ನೇ ಹಂತ ಮೇ ಅಂತ್ಯದ ವೇಳೆಗೆ ಮುಕ್ತಾಯವಾಗಲಿದೆ. ನಾವು ಜನರಿಗೆ ರಿಯಾಯಿತಿ ದರದಲ್ಲಿ ನೀರು ಪೂರೈಸುತ್ತೇವೆ. ನನ್ನ ಮನೆಯ ಕೊಳವೆಬಾವಿ ಸೇರಿದಂತೆ ನಗರದಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿವೆ’ ಎಂದು ತಿಳಿಸಿದರು.

‘ಚುನಾವಣಾ ಸಮಿತಿ ಸಭೆ 7ರಂದು’

'ಇದೇ 7ರಂದು ದೆಹಲಿಯಲ್ಲಿ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಾನು ಹಾಗೂ ಮುಖ್ಯಮಂತ್ರಿ ಇದರಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ' ಎಂದು ಶಿವಕುಮಾರ್ ತಿಳಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜತೆಗಿನ ಸಭೆ ಕುರಿತು ಕೇಳಿದಾಗ, 'ಗ್ಯಾರಂಟಿ ಸಮಿತಿಯಲ್ಲಿ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಬಗ್ಗೆ ನಾನು, ಮುಖ್ಯಮಂತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚರ್ಚೆ ಮಾಡಿದ್ದೇವೆ. ಇದರಲ್ಲಿ ನಾಲ್ಕು ಸಾವಿರ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT