ಬೆಂಗಳೂರು: 108 ಆರೋಗ್ಯ ಕವಚ ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಮೂರು ತಿಂಗಳ ವೇತನ ಬಿಡುಗಡೆಗೊಳಿಸುವಂತೆ ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಶಂಕರ, ‘ಆರೋಗ್ಯ ಕವಚ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕಳೆದ ಮೂರು–ನಾಲ್ಕು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುತ್ತಿಲ್ಲ. ಇದರಿಂದ ಜೀವನ ನಡೆಸುವುದೇ ದುಸ್ತರವಾಗಿದೆ. ಕೂಡಲೇ ಆರೋಗ್ಯ ಇಲಾಖೆಯ ಸಚಿವರು ಸಭೆ ನಡೆಸಿ ವೇತನ ಬಿಡುಗಡೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಇತ್ತೀಚೆಗೆ ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 108 ಸಿಬ್ಬಂದಿಗೆ ತಿಂಗಳಿಗೆ ₹36,008 ಕನಿಷ್ಠ ವೇತನ ನಿಗದಿಪಡಿಸಲಾಗಿತ್ತು. ಅದರಂತೆ ಆರು ತಿಂಗಳ ಕಾಲ ವೇತನವೂ ಪಾವತಿ ಆಗಿದೆ. ನಂತರ ₹6 ಸಾವಿರ ಕಡಿತಗೊಳಿಸಿ, ₹30 ಸಾವಿರ ವೇತನ ಮಾತ್ರ ಪಾವತಿಸಲಾಗುತ್ತಿದೆ’ ಎಂದು ದೂರಿದರು.
‘ಸರ್ಕಾರ ಮತ್ತು ಜಿ.ವಿ.ಕೆ. ಸಂಸ್ಥೆಯ ಒಪ್ಪಂದದ ಪ್ರಕಾರ ಪ್ರತಿವರ್ಷ ವೇತನ ಪರಿಷ್ಕರಣೆ ಮಾಡಬೇಕು. ಆದರೆ, ಇದುವರೆಗೂ ವೇತನ ಪರಿಷ್ಕರಣೆ ಮಾಡಿಲ್ಲ. 10 ದಿನಗಳೊಳಗೆ ಈ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಷ್ಕರ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.