ಬೆಂಗಳೂರು: ಅಗತ್ಯವಿರುವ ಸಿಬ್ಬಂದಿ ಮತ್ತು ಸೌಲಭ್ಯಗಳನ್ನು ಒದಗಿಸುವ ಮೂಲಕ ಗೃಹ ಇಲಾಖೆಯ ಬಲವರ್ಧನೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ವಿಕಾಸಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
'ಗೃಹ ಸಚಿವನಾದ ಬಳಿಕ ಇದು ಮೊದಲ ಸಭೆ. ಇಲಾಖೆಯನ್ನು ಅರಿತುವ ಪ್ರಯತ್ನ ಮಾಡಿದ್ದೇನೆ. ನಮ್ಮ ಪೊಲೀಸ್ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದೆ. ಇನ್ನಷ್ಟು ಸುಧಾರಣೆ ತರಲು ಪ್ರಯತ್ನಿಸುವೆ' ಎಂದರು.
ಈಗ ದೊರೆತ ಮಾಹಿತಿ ಪ್ರಕಾರ, ಇಲಾಖೆಯಲ್ಲಿ 16,000ದಷ್ಟು ಸಿಬ್ಬಂದಿ ಕೊರತೆ ಇದೆ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಸಬ್ ಇನ್ಸ್ಪೆಕ್ಟರ್ಗಳ ಕೊರತೆ ನೀಗುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇರಿಸಿ ಜನರು ನೆಮ್ಮದಿಯಿಂದ ನಿದ್ರೆ ಮಾಡುತ್ತಾರೆ. ಇಲಾಖೆ ಯಾವತ್ತೂ ಮಲಗಬಾರದು. ಸದಾ ಎಚ್ಚರದಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈಶ್ವರಪ್ಪ ಅವರೇ ಉತ್ತರಿಸಬೇಕು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹಿಂಸೆಗೆ ಪ್ರಚೋದನೆ ನೀಡುವಂತೆ ಹೇಳಿಕೆ ಕೊಟ್ಟಿರುವ ಬಗ್ಗೆ ಕೇಳಿದಾಗ, 'ಈ ಬಗ್ಗೆ ಈಶ್ವರಪ್ಪ ಅವರನ್ನೇ ಕೇಳಬೇಕು. ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಅವರ ಜತೆ ಚರ್ಚಿಸುವೆ' ಎಂದರು.