ಮಡಿಕೇರಿ: ‘ಅಕ್ಕಿ ಬದಲಿಗೆ ಹಣ ಕೊಡುತ್ತೇವೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇದೆಯೇ, ದುಡ್ಡನ್ನು ತಿನ್ನಲಾಗುತ್ತದೆಯೇ?’ ಎಂದು ಶಾಸಕ ಆರ್.ಅಶೋಕ್ ಪ್ರಶ್ನಿಸಿದರು.
ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಚೀಲ ಮಾತ್ರ ಸಿದ್ದರಾಮಯ್ಯ ಅವರದ್ದು; ಅದರೊಳಗಿನ ಅಕ್ಕಿ ಕೇಂದ್ರ ಸರ್ಕಾರದ್ದು ಎಂಬುದು ಜನರಿಗೆ ಗೊತ್ತಾಗಿದೆ. ಮೋಸ ಎನ್ನುವುದು ಕಾಂಗ್ರೆಸ್ನವರ ಡಿಎನ್ಎನಲ್ಲಿದೆ’ ಎಂದು ಟೀಕಿಸಿದರು.
‘ಸಿದ್ದರಾಮಯ್ಯ ಹೇಳಿದ್ದೇನು, ಅಧಿಕಾರಕ್ಕೆ ಬಂದ ನಂತರ ಮಾಡಿದ್ದೇನು ಎಂಬುದನ್ನು ಪಕ್ಷದಿಂದ ಮನೆ ಮನೆಗೂ ತಲುಪಿಸಲಾಗುವುದು’ ಎಂದು ತಿಳಿಸಿದರು.
‘ಈ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಎಲ್ಲ ಗ್ಯಾರಂಟಿಗೂ ಒಂದೊಂದು ಚೆಕ್ಪೋಸ್ಟ್ ಇಟ್ಟಿದೆ. ಇವರ ಯಾವ ಗ್ಯಾರಂಟಿಗಳೂ ಜನರಿಗೆ ತಲುಪಿಲ್ಲ. ಇದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರವಾಗಿದೆ. ಈ ಇಬ್ಬರೂ ಶಾಸಕರನ್ನು ತಮ್ಮತ್ತ ಸೆಳೆಯಲು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ’ ಎಂದು ಟೀಕಿಸಿದರು.
ಇದಕ್ಕೂ ಮುನ್ನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಬಹುದು’ ಎಂದರು.
‘ಮುಂಬರುವ 5 ರಾಜ್ಯಗಳ ಚುನಾವಣೆಗೆ ಕರ್ನಾಟಕವೇ ಕಾಂಗ್ರೆಸ್ಗೆ ಎಟಿಎಂ. ಅದಕ್ಕಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ’ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.