ಬೆಂಗಳೂರು: 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಆದಾಯಕ್ಕೆ ಮೀರಿ ₹74.93 ಕೋಟಿ ಮೌಲ್ಯದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲಾತಿಗಳನ್ನು ಒದಗಿಸುವಂತೆ ಲೋಕಾಯುಕ್ತ ಪೊಲೀಸ್ ವಿಭಾಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ನೊಟೀಸ್ ನೀಡಿದೆ.
ಈ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದುಪಡಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಈ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗ, ಕಳೆದ ಫೆ.8ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿರುವ ಲೋಕಾಯುಕ್ತ ಬೆಂಗಳೂರು ನಗರ ವಿಭಾಗದ ತನಿಖಾಧಿಕಾರಿ ಎಂ.ಎಚ್. ಸತೀಶ್, ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ನೀಡಿದ್ದ ಮಾಹಿತಿ ಮತ್ತು ದಾಖಲಾತಿಗಳನ್ನು ಒದಗಿಸುವಂತೆ ನೋಟಿಸ್ನಲ್ಲಿ ಸೂಚಿಸಿದ್ದಾರೆ.