ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿಯಿಂದ ಶಿಕ್ಷಣ ಕ್ಷೇತ್ರ ಕಲುಷಿತಗೊಳಿಸುವ ಕೆಲಸ: ವಿಜಯೇಂದ್ರ ಆಕ್ಷೇಪ

Published 23 ಡಿಸೆಂಬರ್ 2023, 5:34 IST
Last Updated 23 ಡಿಸೆಂಬರ್ 2023, 5:34 IST
ಅಕ್ಷರ ಗಾತ್ರ

ನವದೆಹಲಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ದುರದೃಷ್ಟಕರ’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಎಂ ಅವರಿಂದ ಇಂಥ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಪಕ್ಷ ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳನ್ನಾದರೂ ರಾಜಕೀಯದಿಂದ ದೂರ ಇಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು’ ಎಂದು ಆಕ್ಷೇಪಿಸಿದರು.

‘ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರ್ಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ’ ಎಂದರು.

‍‘ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ 50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು ಎಂದು ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷವಲ್ಲವೇ? ಇವತ್ತಿಗೂ ಕೂಡ ಶೇ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರು ರಾಜ್ಯ, ದೇಶದಲ್ಲಿ ಕೆಲಸ ಇಲ್ಲದೆ ಬೇಜವಾಬ್ದಾರಿಯಿಂದ ಓಡಾಡುತ್ತಿದ್ದರೆ ಅದಕ್ಕೆ ಹೊಣೆಗಾರರು ಕಾಂಗ್ರೆಸ್ ಪಕ್ಷದವರಲ್ಲವೇ’ ಎಂದು ಪ್ರಶ್ನಿಸಿದರು.

‘ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ’ ಎಂದು ವಿಜಯೇಂದ್ರ ಟೀಕಿಸಿದರು.

‘ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ ಎಂದು ಕೇಳಿದರು. ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೆ ಕಾರಣ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ಕಾಂಗ್ರೆಸ್ಸಿಗರು ಅವತ್ತಿನಿಂದ ಇಂದಿನವರೆಗೂ ಒಡೆದು ಆಳುವ ನೀತಿಯನ್ನು ತಮ್ಮದಾಗಿ ಮಾಡಿಕೊಂಡಿದ್ದಾರೆ. ಬ್ರಿಟಿಷರ ಒಡೆದಾಳುವ ನೀತಿಯನ್ನು, ಪರಂಪರೆಯನ್ನು ಮುಂದುವರೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ’ ಎಂದರು.

‘ಹಿಂದೆ 5 ವರ್ಷ ಪರಿಪೂರ್ಣವಾಗಿ ನೀವು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೀರಿ. ಮತ್ತೆ ಅಧಿಕಾರ ಸಿಗುವುದು ಕಷ್ಟ ಎಂಬ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಒಡೆಯಲು ಮುಂದಾಗಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ’ ಎಂದು ಕಟುವಾಗಿ ಟೀಕಿಸಿದರು.

‘ರಾಜ್ಯದಲ್ಲಿ ಇವತ್ತು ಭೀಕರ ಬರಗಾಲವಿದೆ. ರೈತರ ಸಂಕಷ್ಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಆ ಜವಾಬ್ದಾರಿ ಮರೆತ ರಾಜ್ಯ ಸರಕಾರವು, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಲೋಕಸಭಾ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ಕನಸು ಕಾಣುತ್ತಿದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಈ ದೇಶದ ಪ್ರಜ್ಞಾವಂತ ಮತದಾರರು, ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ನಂಬುವುದಿಲ್ಲ. ಅದರ ಬದಲು ಮೋದಿ ಗ್ಯಾರಂಟಿಯನ್ನು ನಂಬುವುದು ರುಜುವಾತಾಗಿದೆ’ ಎಂದು ವಿಶ್ಲೇಷಿಸಿದರು.

‘ಕಾಂಗ್ರೆಸ್ ಪಕ್ಷ ಹತಾಶೆಯಿಂದ ಸಮಾಜ ಸಮಾಜದ ಮಧ್ಯೆ, ಧರ್ಮ ಧರ್ಮದ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ಒಡೆದಾಳುವ ನೀತಿಯನ್ನು ಬಿಜೆಪಿ ಖಂಡಿಸುತ್ತದೆ’ ಎಂದು ತಿಳಿಸಿದರು.

‘ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಘಟನೆಯು ಕಾನೂನು ಸುವ್ಯವಸ್ಥೆ ಕುಸಿದಿರುವುದರ ಸಂಕೇತ. ರಾಜ್ಯದಲ್ಲಿ ಸಿಎಂ ಇದ್ದಾರಾ? ಸಚಿವರು ಇದ್ದಾರಾ? ಎಂದು ಪ್ರಶ್ನಿಸುವಂತಾಗಿದೆ. ಬರಗಾಲವಿದ್ದರೂ ಸಚಿವರು ಅಧಿಕಾರಿಗಳ ಸಭೆ ನಡೆಸಿಲ್ಲ. ಈ ಬೇಜವಾಬ್ದಾರಿ ನಡೆ ಒಂದು ಕಡೆ ಇದ್ದರೆ, ಇನ್ನೊಂದೆಡೆ ಹಿಜಾಬ್ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಹಿಂದೂ ಹೆಣ್ಮಕ್ಕಳ ತಾಳಿ, ಕಾಲುಂಗುರ ತೆಗೆಸುತ್ತಾರೆ. ನಿಮ್ಮ ಉದ್ದೇಶ ಏನು?’ ಎಂದು ಕೇಳಿದರು.

‘ಒಡೆದಾಳುವ ನೀತಿಯನ್ನು ಕೈಬಿಡಿ. ನೀವು ಆರೂವರೆ ಕೋಟಿ ಜನರ ಸಿಎಂ ಎಂದು ನೆನಪಿಡಿ’ ಎಂದು ಆಗ್ರಹಿಸಿದರು.

ಈ ವೇಳೆ ಸಂಸದ ಡಾ.ಉಮೇಶ್ ಜಾಧವ್, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.

ಸಿದ್ದರಾಮಯ್ಯನವರೇ ನೀವೇನು ಮಾಡಿದ್ದೀರಿ?

‘ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು, ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್ ಅನ್ನು ಪ‍್ರಧಾನಿ ನರೇಂದ್ರ ಮೋದಿಯವರು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ?’ ಎಂದು ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT