ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಶನಿವಾರ ಕಾಣಿಸಿಕೊಂಡ ಬೆಂಕಿಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಚಂದ್ರು ಎಂಬುವವರನ್ನು ಬಂಧಿಸಿದ್ದಾರೆ.
ಚಿಕ್ಕಮಾದಪ್ಪ ಮತ್ತು ಮುನಿರಾಜು ಎಂಬ ಇನ್ನಿಬ್ಬರು ಪರಾರಿಯಾಗಿದ್ದು, ಅಧಿಕಾರಿಗಳು ಒಂದು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಚಂದ್ರು ಚೆಲುವರಾಯನಪುರದ ನಿವಾಸಿ.
‘ತನಿಖೆ ಪ್ರಾಥಮಿಕ ಹಂತದಲ್ಲಿದೆ. ವಶಪಡಿಸಿಕೊಂಡಿರುವ ಮೊಬೈಲ್ನಿಂದ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ತಲೆಮರೆಸಿಕೊಂಡವರ ಬಗ್ಗೆಯೂ ಸುಳಿವು ಸಿಕ್ಕಿದೆ. ಅವರನ್ನೂ ಶೀಘ್ರವಾಗಿ ಬಂಧಿಸುತ್ತೇವೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಬಾಲಚಂದ್ರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಕರೆ ವಿವರಗಳ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕಲು ಮೊಬೈಲ್ ಅನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಸಿಬ್ಬಂದಿ ಕೈವಾಡ?: ಈ ಬೆಂಕಿ ಪ್ರಕರಣದಲ್ಲಿ ಇಲಾಖೆಯ ಸಿಬ್ಬಂದಿಯ ಕೈವಾಡ ಇರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಮೂಲಗಳು ತಿಳಿಸಿವೆ.
ಕುಂದುಕೆರೆ ವಲಯದಲ್ಲಿ ಶನಿವಾರ ಕಂಡು ಬಂದ ಬೆಂಕಿಗೆ 150ಕ್ಕೂ ಹೆಚ್ಚು ಎಕರೆ ಕಾಡು ನಾಶವಾಗಿತ್ತು.