ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಸಂಬಂಧ ಸಮೀವುದ್ದಿನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಗೆ 'ಅಲ್ ಹಿಂದ್' ಸಂಘಟನೆ ನಂಟು ಇರುವುದು ತನಿಖೆಯಿಂದ ಗೊತ್ತಾಗಿದೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ರಾತ್ರಿ (ಆ. 11) ನಡೆದ ಗಲಭೆ ಸೃಷ್ಟಿಸುವಲ್ಲಿ ಸಮೀವುದ್ದೀನ್ ಪ್ರಮುಖನಾಗಿದ್ದ ಎನ್ನಲಾಗಿದೆ. ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಆತನನ್ನು ಸಿಸಿಬಿ ಪೊಲೀಸರು ಸೆರೆಹಿಡಿದಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳ ಜೊತೆಯಲ್ಲೂ ಸಮೀವುದ್ದೀನ್ ಒಡನಾಟವಿಟ್ಟುಕೊಂಡಿದ್ದ. 'ಅಲ್ ಹಿಂದ್' ಸಂಘಟನೆ ಉಗ್ರರ ಜೊತೆಯಲ್ಲೂ ಆರೋಪಿ ಕೆಲ ವರ್ಷಗಳಿಂದ ಸಂಪರ್ಕದಲ್ಲಿದ್ದ ಎಂಬುದು ಸಿಸಿಬಿ ತನಿಖೆಯಿಂದ ಬಯಲಾಗಿದೆ.
'ಗಲಭೆ ಸಂಬಂಧ ಸಮೀವುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.
'ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳು ಹಾಗೂ 'ಅಲ್ ಹಿಂದ್' ಸಂಘಟನೆ ಜೊತೆ ಸಮೀವುದ್ದೀನ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ' ಎಂದರು.