2020ರ ಮಾರ್ಚ್ ಕೊನೆಯ ವಾರದಲ್ಲಿ ಬಜೆಟ್ ಮಂಡಿಸಲು ಬಿಬಿಎಂಪಿ ಆಡಳಿತ ಪಕ್ಷ ಸಿದ್ಧತೆ ನಡೆಸಿತ್ತು. ಅಷ್ಟರಲ್ಲಿ ಕೊರೊನಾ ಸೋಂಕು ಹಬ್ಬುವಿಕೆ ತಡೆಯುವ ಸಲುವಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿದ್ದರಿಂದ ಬಜೆಟ್ ಮಂಡನೆ ಸಲುವಾಗಿ ಬಿಬಿಎಂಪಿ ಕೌನ್ಸಿಲ್ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ 2020-21 ಸಾಲಿನ ಅನುದಾನ ಬಳಕೆಗೆ ಬಿಕ್ಕಟ್ಟು ಎದುರಗಿತ್ತು. ಅಧಿಕಾರಿಗಳ, ಪೌರಕಾರ್ಮಿಕರ ವೇತನ ಬಿಡುಗಡೆ, ಸ್ವಚ್ಛತೆ ಮತ್ತು ಆರೋಗ್ಯ ಸಂಬಂಧಿ ವೆಚ್ಚ ಮಾಡುವುದಕ್ಕೂ ಸಮಸ್ಯೆ ಎದುರಾಗಿತ್ತು.
ಮೇಯರ್ ಎಂ.ಗೌತಮ್ ಕುಮಾರ್, ಉಪಮೇಯರ್ ರಾಮಮೋಹನ ರಾಜು ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದು ಮಾರ್ಗದರ್ಶನ ಮಾಡುವಂತೆ ಕೋರಿದ್ದರು.