ಬೆಂಗಳೂರು: ‘ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆಯಕಟ್ಟಿನ ಹುದ್ದೆಗಳಿಂದ ಲಿಂಗಾಯತರನ್ನು ಕಿತ್ತು ಹಾಕಲು ಮತ್ತು ಪ್ರಮುಖ ಹುದ್ದೆಗಳಿಗೆ ವರ್ಗಾವಣೆ ಮಾಡಬಾರದು ಎಂಬ ಸೂಚನೆ ಮುಖ್ಯಮಂತ್ರಿ ಮತ್ತು ಇತರ ಕೆಲವು ಸಚಿವರ ಕಚೇರಿಗಳಿಂದ ಹೋಗಿದೆ’ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ದೂರಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ನಿರ್ಲಕ್ಷಿಸುತ್ತಿರುವ ಕುರಿತು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ನೂರಕ್ಕೆ ನೂರು ನಿಜ’ ಎಂದು ಹೇಳಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಮತ್ತು ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ವರಿಷ್ಠರ ನಿರ್ಧಾರ ಸರಿಯಾಗಿದೆ. ಈ ಹೊಂದಾಣಿಕೆ ಬಗ್ಗೆ ಕೆಲವರ ಆಕ್ಷೇಪ ಇರಬಹುದು. ಕ್ರಮೇಣ ಎಲ್ಲವೂ ಸರಿಹೋಗುತ್ತದೆ ಎಂದರು.
‘ಹಾವೇರಿ ಲೋಕಸಭಾ ಕ್ಷೇತ್ರದ ಸದಸ್ಯ ಶಿವಕುಮಾರ್ ಉದಾಸಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ನಾನೂ ಕೂಡ ಆಕಾಂಕ್ಷಿ. ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಪಾಟೀಲ ಹೇಳಿದರು.
900 ರೈತರ ಆತ್ಮಹತ್ಯೆ: ರಾಜ್ಯದಲ್ಲಿ ಈ ವರ್ಷ ಸೆಪ್ಟೆಂಬರ್ ಅಂತ್ಯದವರೆಗೆ 900 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ನೀತಿಯ ಕಾರಣ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎಂದು ಪಾಟೀಲ ಹೇಳಿದರು.
ರಾಜ್ಯದಲ್ಲಿ ಬರದಿಂದಾಗಿ ಈವರೆಗೆ 11,18,527 ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ಆದರೆ, ಸರ್ಕಾರವು ಒಬ್ಬನೇ ಒಬ್ಬ ರೈತನಿಗೂ ಒಂದು ಪೈಸೆ ಪರಿಹಾರ ನೀಡಿಲ್ಲ ಎಂದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.