ವಿಧಾನ ಪರಿಷತ್: ರಾಜ್ಯದಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ನಿಯಮ ರದ್ದು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ವೈದ್ಯಕೀಯ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಮಸೂದೆ –2023’ಗೆ ಅಂಗೀಕಾರಗೊಂಡಿತು.
ಮಸೂದೆ ಮಂಡಿಸಿ ವಿವರಣೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಿತಿಗೊಳಿಸಿ ಅಭ್ಯರ್ಥಿಗಳು ಸರ್ಕಾರಿ ಸೇವೆಗೆ ನೇಮಿಸಲು ಈ ತಿದ್ದುಪಡಿಯಿಂದ ಅವಕಾಶ ಆಗಲಿದೆ. ಇದರ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಹಣ ಉಳಿಸುವ ಉದ್ದೇಶವೂ ಇಲ್ಲ’ ಎಂದರು.
ಬಿಜೆಪಿಯ ವೈ.ಎ. ನಾರಾಯಣ ಸ್ವಾಮಿ, ಎನ್. ರವಿಕುಮಾರ್, ಪಿ.ಎಚ್. ಪೂಜಾರ್, ‘ಈ ತಿದ್ದುಪಡಿ ಮೂಲ ಕಾಯ್ದೆಯನ್ನು ದುರ್ಬಲಗೊಳಿಸಲಿದೆ. ಹೀಗಾಗಿ, ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.