ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯ ಸುರಕ್ಷತಾ ಪರಿಶೀಲನೆಗಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆ ಸುರಕ್ಷತಾ ತಜ್ಞರ ಸಮಿತಿ ರಚಿಸಿದೆ.
‘ಸುರಕ್ಷಿತ ಪ್ರಯಾಣ ಉತ್ತೇಜಿಸುವ ಮೂಲಕ ಕರ್ನಾಟಕದ ಜನರಿಗೆ ಕಾರಿಡಾರ್ನ ಸೇವೆಯನ್ನು ಖಚಿತಪಡಿಸುವುದು ಈ ಸಮಿತಿ ರಚನೆಯ ಉದ್ದೇಶ. ಸಮಿತಿಯು ಪ್ರಸ್ತುತ ಹೆದ್ದಾರಿ ಪ್ರವಾಸದಲ್ಲಿದ್ದು, ಜುಲೈ 20ರೊಳಗೆ ಅಧ್ಯಯನ ಪೂರ್ಣಗೊಳಿಸಲಿದೆ. ಬಳಿಕ ಸಮಿತಿಯು ವರದಿಯನ್ನು 10 ದಿನಗಳಲ್ಲಿ ಸಲ್ಲಿಸಲಿದೆ’ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
118 ಕಿ.ಮೀ. ಉದ್ದದ ಎಕ್ಸ್ಪ್ರೆಸ್ವೇಯಲ್ಲಿ ಈ ವರ್ಷದ ಮಾರ್ಚ್ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಹೆದ್ದಾರಿಯು ವಾಣಿಜ್ಯ ಚಟುವಟಿಕೆ ಉತ್ತೇಜಿಸುತ್ತಿದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಹೆದ್ದಾರಿಯು ಕರ್ನಾಟಕದ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 75 ನಿಮಿಷಗಳಿಗೆ ಇಳಿಸಿದೆ ಎಂದು ಸಚಿವಾಲಯ ಹೇಳಿದೆ.
ಈ ಕಾರಿಡಾರ್ನಲ್ಲಿ 4 ರೈಲು ಮೇಲ್ಸೇತುವೆಗಳು, 9 ಪ್ರಮುಖ ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಇವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.