ಬೆಂಗಳೂರು: ಮತದಾರರ ಪಟ್ಟಿಯಿಂದ ಸಾಮೂಹಿಕವಾಗಿ ಹೆಸರು ಕೈಬಿಡಲಾಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮಂಗಳವಾರ ದೂರು ಸಲ್ಲಿಸಿದೆ.
ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಕನಿಷ್ಠ 100ರಿಂದ 200 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬೆಂಗಳೂರಿನಲ್ಲಿ ಇಂತಹ ಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆದಿವೆ.
ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.
‘ಮತದಾರರ ಮನೆಗಳ ಮೇಲೆ ಧ್ವಜಗಳನ್ನು ಹಾಕಬಹುದು ಎಂದು ನೀತಿಸಂಹಿತೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ, ಅನೇಕ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇಲ್ಲ. ಮನೆ ಮೇಲಿದ್ದ ಧ್ವಜಗಳನ್ನು ತೆಗೆಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಲಾಗಿದೆ.
‘ಈ ಹಿಂದಿನ ಚುನಾವಣೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಅನೇಕರಿಗೆ ತಾವು ಬೂತ್ ಮಟ್ಟದ ಅಧಿಕಾರಿಗಳು ಎಂಬುದೇ ಗೊತ್ತಿರಲಿಲ್ಲ. ಈ ಬಗ್ಗೆ ಗಮನ ಹರಿಸಬೇಕು. ಬೆಂಗಳೂರಿನಲ್ಲಿ ಹೊಸ ಮತದಾರರ ನೋಂದಣಿಯನ್ನೇ ಮಾಡಿರಲಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೊಸ ಮತದಾರರ ನೋಂದಣಿ ಪ್ರಮಾಣ ಕಡಿಮೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.