ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಪ್ಪಿದ ವಿಧಾನ ಪರಿಷತ್ ಟಿಕೆಟ್: ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಶಾಸಕ ರಘುಪತಿ ಭಟ್

Published 12 ಮೇ 2024, 4:11 IST
Last Updated 12 ಮೇ 2024, 4:11 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ ಟಿಕೆಟ್ ಕೈತಪ್ಪಿದ್ದರಿಂದ ವಿಚಲಿತನಾಗಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ, ಫೇಸ್‌ಬುಕ್ ಪೋಸ್ಟ್ ಮೂಲಕ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದವಿಧರರ ಕ್ಷೇತ್ರದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ' ಎಂದು ಹೇಳಿದ್ದಾರೆ.

'1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು’ ಎಂದು ಬೇಸರ ತೋಡಿಕೊಂಡಿದ್ದಾರೆ.

‘ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT