ಬೆಂಗಳೂರು: ‘ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿ, ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದರು.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ’ ಎಂದರು.
‘ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ. ಮಂಡ್ಯದ ಜನರು ಸಹಿಷ್ಣುತೆ ಉಳ್ಳವರು, ಜಾತ್ಯತೀತರು. ಇಂಥ ವಿಚಾರಗಳಿಗೆ ಮಾರುಹೋಗುವುದಿಲ್ಲ’ ಎಂದರು.
‘ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ’ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದರು.