ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆಗೆ ಆಗ್ರಹಿಸಿ ಅಮಿತ್‌ ಶಾಗೆ ಯತ್ನಾಳ ಪತ್ರ

Published 1 ಜೂನ್ 2024, 7:16 IST
Last Updated 1 ಜೂನ್ 2024, 7:16 IST
ಅಕ್ಷರ ಗಾತ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ವರ್ಗಾವಣೆ ಮಾಡಿರುವ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವರಿಗೆ ಶನಿವಾರ ಪತ್ರ ಬರೆದಿರುವ ಯತ್ನಾಳ, ʼಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ. ಹಗರಣದ ತನಿಖೆಯನ್ನು ನಡೆಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಅಧಿಕಾರಿಗಳು ಈಗಾಗಲೇ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ, ಕಾನೂನು ಕ್ರಮದ ವ್ಯಾಪ್ತಿಗೆ ಒಳಪಡಿಸಲು ಅನುಕೂಲವಾಗುವಂತೆ ತಕ್ಷಣವೇ ಸಿಬಿಐ ತನಿಖೆಗೆ ಆದೇಶಿಸಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಅಕ್ರಮಕ್ಕೆ ಸಹಕರಿಸುವಂತೆ, ಅಧಿಕಾರಿಗಳ ಮೇಲೆ ಒತ್ತಡ ಹೇರುವುದು, ಲಂಚ, ಹಣಕಾಸು ಅವ್ಯವಹಾರಗಳ ಪ್ರಕರಣಗಳು ಹೆಚ್ಚುತ್ತಿವೆ. ಹಿರಿಯ ಅಧಿಕಾರಿಗಳು, ಸಚಿವರು ಮತ್ತು ನಿರ್ಧಾರ ಕೈಗೊಳ್ಳುವವರ ಒತ್ತಡಗಳಿಂದಾಗಿಯೇ ಸರ್ಕಾರಿ ನೌಕರರು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹೆಚ್ಚುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.

2019ರಲ್ಲಿ ಸಚಿವರಾಗಿದ್ದ ಜಿ. ಪರಮೇಶ್ವರ ಅವರ ಆಪ್ತ ಸಹಾಯಕ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2016ರಲ್ಲಿ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್‌ಪಿ ಎಂ.ಕೆ. ಗಣಪತಿ ಆಗಿನ ಸಚಿವರು ಮತ್ತು ಐಪಿಎಸ್‌ ಅಧಿಕಾರಿಗಳ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಮೇ 30ರಂದು ದಾವಣಗೆರೆಯಲ್ಲಿ ಪಿ.ಎಸ್‌. ಗೌಡರ್‌ ಎಂಬ ಗುತ್ತಿಗೆದಾರ ಕೆಆರ್‌ಐಡಿಎಲ್‌ ಅಧಿಕಾರಿಗಳ ಕಿರುಕುಳದ ಕಾರಣ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳ ಒತ್ತಡ ತಡೆಯಲಾಗದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಞಕ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಗಮದ ಹಣವನ್ನು ಅಕ್ರಮವಾಗಿ ಕೆಲವು ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡುವಂತೆ ಒಬ್ಬ ಸಚಿವ ಹಾಗೂ ಕೆಲವು ಅಧಿಕಾರಿಗಳು ಚಂದ್ರಶೇಖರನ್‌ ಮೇಲೆ ತೀವ್ರ ಒತ್ತಡ ಹೇರಿದ್ದರು. ಚಂದ್ರಶೇಖರನ್‌ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ₹ 88.62 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಆ ಬಳಿಕವೇ ಬಹಿರಂಗವಾಗಿದೆ ಎಂದು ಯತ್ನಾಳ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ವಹಿವಾಟುಗಳು ವಂಚನೆಯಿಂದ ಕೂಡಿವೆ ಎಂದು ಯೂನಿಯನ್‌ ಬ್ಯಾಂಕ್‌ ಈಗಾಗಲೇ ಘೋಷಿಸಿದೆ. ಬ್ಯಾಂಕ್‌ನ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಬ್ಯಾಂಕ್‌ ಆಡಳಿತ ಮಂಡಳಿ ಪತ್ರ ಬರೆದಿದೆ. ತ್ವರಿತವಾಗಿ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರನ್ನು ಪತ್ತೆಹಚ್ಚುವ ಮೂಲಕ ರಾಜ್ಯದ ಪರಿಶಿಷ್ಟ ಪಂಗಡಗಳ ಜನರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT