ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬಿಜೆಪಿಯಲ್ಲಿ ಹೆಚ್ಚಿದ ಒಡಲ ಉರಿ: ವಿಜಯೇಂದ್ರ ಇಳಿಸುವ ಪ್ರಯತ್ನಕ್ಕೆ ಮರು ಚಾಲನೆ

Published : 12 ಆಗಸ್ಟ್ 2024, 23:44 IST
Last Updated : 12 ಆಗಸ್ಟ್ 2024, 23:44 IST
ಫಾಲೋ ಮಾಡಿ
Comments
‘ವರಿಷ್ಠರು ಒಪ್ಪಿದರೆ ಬಳ್ಳಾರಿಗೆ ಪಾದಯಾತ್ರೆ’
ಹೊಸಪೇಟೆ: ‘ನಮಗೆ ಇರುವುದು ಒಂದೇ ಹೈಕಮಾಂಡ್. ಪಕ್ಷದ ವರಿಷ್ಠರಾದ ನಡ್ಡಾ, ಸಂತೋಷ್ ಸಮ್ಮತಿಸಿದರೆ ಮಾತ್ರ ಪಾದಯಾತ್ರೆ ಮಾಡುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ‘ಬಿಜೆಪಿಯ ಕೆಲ ನಾಯಕರು ಬಳ್ಳಾರಿಗೆ ಪಾದಯಾತ್ರೆ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ. ವರಿಷ್ಠರಿಂದ ಒಪ್ಪಿಗೆ ಸಿಕ್ಕಿಲ್ಲ’ ಎಂದೂ ಹೇಳಿದರು.
‘ಭಿನ್ನರ ‘ರಾಗ’; ಕೆಲವು ವಿಚಾರ ಸರಿ’
ಧಾರವಾಡ: ‘ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ಹಾಗೂ ಜಿ.ಎಂ.ಸಿದ್ಧೇಶ್ವರ ಅವರು ಹೇಳಿರುವ ಕೆಲವು ವಿಚಾರಗಳು ಸರಿ ಇವೆ. ಅವರ ನಡೆಗೆ ಸಂಬಂಧಿಸಿದಂತೆ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಲಾಗುವುದು’ ಎಂದು ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು. ‘ಎಲ್ಲ ಪಕ್ಷಗಳಲ್ಲೂ ಸಮಸ್ಯೆಗಳು ಇರುತ್ತವೆ. ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು’ ಎಂದರು.
‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ’
ದಾವಣಗೆರೆ: ‘ಶಾಸಕ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಿ ಶಿಕಾರಿಪುರ ಕ್ಷೇತ್ರದಲ್ಲಿ ಮರುಚುನಾವಣೆ ಎದುರಿಸಲಿ’ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್‌ ಒತ್ತಾಯಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಜಯೇಂದ್ರ ಶಾಸಕ ಸ್ಥಾನ ಕಾಂಗ್ರೆಸ್‌ ಭಿಕ್ಷೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವಿನ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಇದು ಪುಷ್ಟಿ ನೀಡಿದೆ. ಇಂತಹ ಬ್ಲ್ಯಾಕ್‌ಮೇಲ್‌ಗೆ ಬಿ.ಎಸ್‌.ಯಡಿಯೂರಪ್ಪ ಕುಟುಂಬ ಸರಿಯಾಗಿ ಪ್ರತಿಕ್ರಿಯಿಸಬೇಕು. ಕಾಂಗ್ರೆಸ್‌ ಭಿಕ್ಷೆಯಿಂದ ಶಾಸಕರಾಗುವ ಅನಿವಾರ್ಯ ಬಿಜೆಪಿ ನಾಯಕರಿಗೆ ಇಲ್ಲ ಎಂಬುದನ್ನು ತೋರಿಸಬೇಕು’ ಎಂದರು. ‘ಹೋರಾಟ, ಪಕ್ಷ ಸಂಘಟನೆಯಿಂದ ವಿಮುಖರಾಗಿರುವ ಯಡಿಯೂರಪ್ಪ ಶ್ರೀಮಂತ ಕುಟುಂಬಗಳ ಸಖ್ಯ ಬಯಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಕೂಡ ಇವರೊಂದಿಗೆ ಕೈಜೋಡಿಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಹೇಳಿದರು. ‘ರಾಜ್ಯದಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣ ಅಸಹ್ಯ ಹುಟ್ಟಿಸಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರು ಭ್ರಷ್ಟಾಚಾರ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಮುಖಂಡರಿಗೆ ತಕ್ಕ ಪಾಠ ಕಲಿಸಲಿದ್ದೇವೆ’ ಎಂದರು. ‘ವಿಜಯೇಂದ್ರ ಮಾಡಿರುವ ತಪ್ಪುಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುತ್ತದೆ. ಪಕ್ಷಕ್ಕೆ ಪರ್ಯಾಯ ನಾಯಕರ ಅಗತ್ಯವಿದ್ದು, ಹೈಕಮಾಂಡ್‌ ಒಪ್ಪಿಗೆ ಪಡೆದು ಮುಂದುವರಿಯುತ್ತೇವೆ’ ಎಂದು ಹೇಳಿದರು.
ಆರ್‌ಎಸ್‌ಎಸ್‌ ಮಧ್ಯಪ್ರವೇಶ?
ಬಿಜೆಪಿಯಲ್ಲಿ ಅತೃಪ್ತಿ ಮತ್ತು ಬಂಡಾಯವನ್ನು ಶಮನ ಮಾಡಲು ಆರ್‌ಎಸ್‌ಎಸ್‌ ಮಧ್ಯಪ್ರವೇಶಿಸುವ ಸಾಧ್ಯತೆ ಇದೆ. ಈ ಸಂಬಂಧ ಇದೇ 21ರಂದು ಆಯ್ದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಲಿದೆ ಎಂದು ಮೂಲಗಳು ಹೇಳಿವೆ. ರಾಷ್ಟ್ರಮಟ್ಟದಲ್ಲಿಯೂ ಬಿಜೆಪಿ ಮತ್ತು ಆರ್‌ಎಸ್ಎಸ್‌ ಮಧ್ಯೆ ಸಮನ್ವಯ ಸಭೆ ನಡೆಯಲಿದೆ. ರಾಜ್ಯದಲ್ಲಿ ಭಿನ್ನಮತ ತಾರಕಕ್ಕೆ ಏರುವ ಮೊದಲೇ ಅದನ್ನು ಶಮನ ಮಾಡಲು ಸಂಘದ ಮುಖಂಡರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT