ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನ ವಿರೋಧಿ ಹಾಗೂ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಪಾದಿಸಿ, ಬಿಜೆಪಿ ರಾಜ್ಯ ಘಟಕ ರಾಜ್ಯದಾದ್ಯಂತ ಶುಕ್ರವಾರ (ಸೆ.8) ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಗೋವಿಂದ ಕಾರಜೋಳ, ಆರ್.ಅಶೋಕ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬೆಂಗಳೂರಿನ ಎಲ್ಲ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದಾದ್ಯಂತ ಮಳೆ ಇಲ್ಲದೆ 196ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರದ ಪರಿಸ್ಥಿತಿ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ. ದನ ಕರುಗಳಿಗೆ ಕುಡಿಯುವ ನೀರಿಲ್ಲ; ಮೇವೂ ಇಲ್ಲದ ಪರಿಸ್ಥಿತಿ ಇದೆ. ವಿದ್ಯುತ್ ದುಬಾರಿಯಾಗಿದ್ದರಿಂದ ಮಧ್ಯಮ ವರ್ಗದವರು ಪರಿತಪಿಸುತ್ತಿದ್ದಾರೆ. ಹಾಲಿನ ದರವನ್ನೂ ಹೆಚ್ಚಿಸಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವನ್ನೆಲ್ಲ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಚ್ಚುವರಿಯಾಗಿ ₹4 ಸಾವಿರ ನೀಡಲಾಗುತ್ತಿತ್ತು. ಅದನ್ನೂ ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ರಾಜ್ಯದಲ್ಲಿ ನೂರಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಸರ್ಕಾರವು 100 ದಿನಗಳ ಆಡಳಿತ ಅವಧಿಯಲ್ಲಿ ಐದು ಗ್ಯಾರಂಟಿಗಳ ಅನುಷ್ಠಾನವನ್ನೇ ಮುಂದಿಟ್ಟುಕೊಂಡು ಸಂಭ್ರಮಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.