ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ದೋಷಾರೋಪ ಪಟ್ಟಿ ಸಿದ್ಧತೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಸಿಸಿಬಿ ಪೊಲೀಸರು, ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಹಾಗೂ ಇತರರನ್ನು ಈಗಾಗಲೇ ಬಂಧಿಸಿದ್ದಾರೆ.
‘ಬಂಡೆಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ದೂರಿನಲ್ಲಿದ್ದ ಸಂಗತಿಗಳಿಗೆ ತಕ್ಕಂತೆ ತನಿಖೆ ನಡೆಸಲಾಗಿದೆ. ದೂರುದಾರರು ಹಾಗೂ 68 ಸಾಕ್ಷಿದಾರರ ಹೇಳಿಕೆ ಪಡೆಯಲಾಗಿದೆ. ಅದಕ್ಕೆ ಸಂಬಂಧಪಟ್ಟ ಪೂರಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಕೆಲವೇ ದಿನಗಳಲ್ಲಿ ವರದಿ ಬರಲಿದೆ. ಇದಾದ ನಂತರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ಚೈತ್ರಾ, ಹಾಲವೀರಪ್ಪ ಸ್ವಾಮೀಜಿ ಸೇರಿ 7 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಆರೋಪಿಗಳಿಂದ ಈಗಾಗಲೇ ₹ 4.11 ಕೋಟಿ ಜಪ್ತಿ ಮಾಡಲಾಗಿದೆ. ಟಿಕೆಟ್ ಸಂಬಂಧ ನಡೆದಿದ್ದ ಮಾತುಕತೆಗೆ ಸಂಬಂಧಪಟ್ಟಂತೆ 10 ವಿಡಿಯೊಗಳು ಸಿಕ್ಕಿದ್ದು, ಅವುಗಳ ಪರಿಶೀಲನೆಯೂ ಮುಗಿದಿದೆ’ ಎಂದು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.