ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ: 2 ದಿನ 20 ಸಾವು

Last Updated 6 ಆಗಸ್ಟ್ 2021, 16:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಎರಡೇ ದಿನಗಳಲ್ಲಿ 20 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ಅವಧಿಯಲ್ಲಿ ಸೋಂಕು ತಗಲಿರುವ ಹೊಸ ಪ್ರಕರಣ ವರದಿಯಾಗಿಲ್ಲ. ಆದರೆ, ಕಳೆದೊಂದು ವಾರದಿಂದ ಅಧಿಕ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಈವರೆಗೆ 3,713 ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರಲ್ಲಿ 387 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ವರದಿಯಾದ ಒಟ್ಟು ಪ್ರಕರಣಗಳಲ್ಲಿ ಶೇ 33 ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ನಡೆದಿವೆ. ಈವರೆಗೆ 1,182 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಅವರಲ್ಲಿ 127 ಮಂದಿ ಸಾವಿಗೀಡಾಗಿದ್ದಾರೆ.

ಧಾರವಾಡದಲ್ಲಿ 284, ವಿಜಯಪುರದಲ್ಲಿ 226, ಕಲಬುರ್ಗಿಯಲ್ಲಿ 207, ಬಳ್ಳಾರಿಯಲ್ಲಿ 165, ಬೆಳಗಾವಿಯಲ್ಲಿ 159, ಚಿತ್ರದುರ್ಗದಲ್ಲಿ 156, ರಾಯಚೂರಿನಲ್ಲಿ 137, ಮೈಸೂರಿನಲ್ಲಿ 132, ಬಾಗಲಕೋಟೆಯಲ್ಲಿ 131, ದಾವಣಗೆರೆಯಲ್ಲಿ 118, ಕೋಲಾರದಲ್ಲಿ 110 ಹಾಗೂ ದಕ್ಷಿಣ ಕನ್ನಡದಲ್ಲಿ 103 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇದೆ. ಕಳೆದ ಒಂದು ತಿಂಗಳಿನಿಂದ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ.

ರಾಜ್ಯದ 26 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 30, ಧಾರವಾಡ ಹಾಗೂ ಬಳ್ಳಾರಿಯಲ್ಲಿ ತಲಾ 28, ಕಲಬುರ್ಗಿಯಲ್ಲಿ 23, ದಾವಣಗೆರೆಯಲ್ಲಿ 20, ಮೈಸೂರಿನಲ್ಲಿ 17, ಶಿವಮೊಗ್ಗದಲ್ಲಿ 15, ಬಾಗಲಕೋಟೆಯಲ್ಲಿ 13, ಹಾಸನ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಗದಗದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

‘ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ಇಳಿಕೆ ಕಂಡಿವೆ. ಸೋಂಕಿತರಲ್ಲಿ ಕೆಲವರು ತಡವಾಗಿ ಆಸ್ಪತ್ರೆಗೆ ತೆರಳುತ್ತಿರುವುದರಿಂದ ಜೀವಕ್ಕೆ ಅಪಾಯವಾಗುತ್ತಿದೆ. ಕೆಲ ಆಸ್ಪತ್ರೆಗಳು ಕೂಡ ಮರಣ ಪ್ರಕರಣಗಳನ್ನು ತಡವಾಗಿ ವರದಿ ಮಾಡುತ್ತಿವೆ. ಹೀಗಾಗಿ, ವಾರದ ಹಿಂದೆ ಮೃತಪಟ್ಟವರ ಮಾಹಿತಿ ಕೂಡ ಈಗ ಪೋರ್ಟಲ್‌ನಲ್ಲಿ ದಾಖಲಾಗುವ ಸಾಧ್ಯತೆ ಇರುತ್ತದೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT