ಬೆಂಗಳೂರು: ‘ರಾಜ್ಯದಲ್ಲಿ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವುದರಿಂದ ಬೀಜ ಮತ್ತು ಗೊಬ್ಬರಕ್ಕೆ ಕೊರತೆ ಆಗದಂತೆ ನೋಡಿಕೊಳ್ಳಿ' ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಇಲಾಖೆ ಹಿರಿಯ ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದಾರೆ.
ಉತ್ತಮ ಮಳೆಯಾಗುತ್ತಿರುವ ಕಾರಣ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರು ಬೀಜ ಮತ್ತು ಗೊಬ್ಬರದ ಕೊರತೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು. ಇಲಾಖೆಯ ಅಧಿಕಾರಿಗಳ ಸಭೆಯನ್ನು ತಕ್ಷಣ ಕರೆದು ಬೀಜ, ಗೊಬ್ಬರ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದೂ ಹೇಳಿದರು.