ಬೆಂಗಳೂರು: ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಿಮಗಡ್ಡೆ ಕುಸಿತಕ್ಕೆ ಸಿಲುಕಿ ಮೃತಪಟ್ಟಿರುವ ಕೊಡಗು ಜಿಲ್ಲೆ ವಿರಾಜಪೇಟೆಯ ಯೋಧ ಅಲ್ತಾಫ್ ಅಹಮ್ಮದ್ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ನಿವೇಶನ ನೀಡಬೇಕು ಎಂದು ಕಾಂಗ್ರೆಸ್ನ ಸಿ.ಎಂ. ಇಬ್ರಾಹಿಂ ಸರ್ಕಾರವನ್ನು ಆಗ್ರಹಿಸಿದರು.
ವಿಧಾನ ಪರಿಷತ್ನಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಶಿವಮೊಗ್ಗದಲ್ಲಿ ಮೃತಪಟ್ಟ ಹರ್ಷ ಎಂಬ ಯುವಕನ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ನೆರವು ನೀಡಿದೆ. ದೇಶದ ಗಡಿ ಕಾಯುವ ಯೋಧನೊಬ್ಬ ಮೃತಪಟ್ಟಾಗ ಜಿಲ್ಲಾ ಉಸ್ತುವಾರಿ ಸಚಿವರೂ ಗೌರವಿಸಲಿಲ್ಲ. ಅವರ ಕುಟುಂಬಕ್ಕೆ ನೆರವು ನೀಡಿಲ್ಲ’ ಎಂದರು.
‘ಅಲ್ತಾಫ್ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಅವರಿಗೂ ನೆರವು ನೀಡಬೇಕು. ವಾಸಿಸಲು ಸರಿಯಾದ ಮನೆ ಇಲ್ಲ. ಒಂದು ನಿವೇಶನವನ್ನೂ ಕೊಡಬೇಕು’ ಎಂದು ಒತ್ತಾಯಿಸಿದರು.
‘ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಗೌರವವಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರೇ ಉತ್ತರ ನೀಡುತ್ತಾರೆ’ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.