ಸಾಗರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಪಿಎಂಕೇರ್ಸ್ ನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ದಾಖಲಿಸಿದ ಸಂಬಂಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಬುಧವಾರ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ವಕೀಲ ಕೆ.ವಿ. ಪ್ರವೀಣ್ ಕುಮಾರ್ ನೀಡಿರುವ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.
‘ಸೋನಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪಿ.ಎಂ. ಕೇರ್ಸ್ ನಿಧಿಗೆ ಸಂದಾಯವಾಗುತ್ತಿರುವ ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ ಎಂದು ಪ್ರಕಟಿಸಿದ್ದಾರೆ. ಈ ಸಂದೇಶ ನಾಗರಿಕರಲ್ಲಿ ಅಪನಂಬಿಕೆ ಹುಟ್ಟಿಸಿ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವಾಗಿದೆ’ ಎಂದು ದೂರಿನಲ್ಲಿ ಹೇಳಲಾಗಿದೆ.
ಭಾರತೀಯ ದಂಡ ಸಂಹಿತೆ ಕಲಂ 153 (ದಂಗೆ ಏಳಲು ಪ್ರಚೋದನೆ), 505 (1), (ಬಿ) ( ಸರ್ಕಾರದ ವಿರುದ್ಧ ಅಪನಂಬಿಕೆ ಹುಟ್ಟಿಸುವುದು) ರ ಅನ್ವಯ ಎಫ್ಐಆರ್ ದಾಖಲಿಸಲಾಗಿದೆ.