ಎಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಯೇ (ಜಾತಿಗಣತಿ) ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸಬಾರದು ಎಂದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳನ್ನು ಪ್ರತಿನಿಧಿಸುವ ಸಂಘಟನೆಗಳು ಆಗ್ರಹಪಡಿಸುತ್ತಿವೆ. ಮುಖ್ಯಮಂತ್ರಿ ಅವರನ್ನು ಮಂಗಳವಾರ ಭೇಟಿ ಮಾಡಿದ್ದ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಸಮುದಾಯದ ಸ್ವಾಮೀಜಿಗಳು, ರಾಜಕೀಯ ನೇತಾರರು ಸಹಿ ಹಾಕಿರುವ ಆಕ್ಷೇಪ ಪತ್ರವನ್ನು ನೀಡಿದ್ದರು. ಈ ಪತ್ರಕ್ಕೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಸಿ. ಸುಧಾಕರ್, ಎನ್. ಚಲುವರಾಯಸ್ವಾಮಿ ಕೂಡ ಸಹಿ ಮಾಡಿದ್ದಾರೆ.